ಚಳ್ಳಕೆರೆ: ಎರಡು ವರ್ಷಗಳಿಂದ ಗುತ್ತಿಗೆದಾರರಿಗೆ ಕಾಮಗಾರಿಗಳ ಬಾಕಿ ಹಣ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಮಾರ್ಚ್ 6ರಿಂದ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಟ್ಟದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಗುತ್ತಿಗೆದಾರ ಜಗದೀಶ್ ತಿಳಿಸಿದರು.
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಗುತ್ತಿಗೆದಾರರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಕಾಮಗಾರಿಗಳನ್ನೇ ನಂಬಿಕೊಂಡಿರುವ ಗುತ್ತಿಗೆದಾರರ ಬದುಕು ಸಂಕಷ್ಟದಲ್ಲಿದೆ ಎಂದರು. ಸರ್ಕಾರ ಗ್ಯಾರಂಟಿ ಯೋಜನೆಗಳ ನಡುವೆ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುತ್ತಿಲ್ಲ. ಎರಡು ವರ್ಷಗಳಿಂದ ಬಿಡುಗಡೆ ಮಾಡಬೇಕಾದ ಬಾಕಿ ಹಣ ನೀಡದೆ ವಿಳಂಬ ಮಾಡುತ್ತಿರುವುದರಿಂದ ಗುತ್ತಿಗೆದಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.
“ಬಡ್ಡಿಗೆ ಹಣ ಪಡೆದು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದೇವೆ. ಆದರೆ ಹಣ ಬಿಡುಗಡೆ ಆಗದೆ ಇರುವುದರಿಂದ ನಂಬಿದ ಜನರ ನಡುವೆ ನಮ್ಮ ಹಣಕಾಸಿನ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಲವು ಬಾರಿ ಸರ್ಕಾರದ ಗಮನಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ವ್ಯಾಪ್ತಿಯ ಗುತ್ತಿಗೆದಾರರ ತೀರ್ಮಾನದಂತೆ ಮಾರ್ಚ್ 6ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಇಂಜಿನಿಯರ್ ಎಚ್. ತಿಪ್ಪೇರುದ್ರಪ್ಪ, ವಕೀಲ ಕೆ. ಕುಮಾರ್, ನನ್ನಿವಾಳ ನಾಗರಾಜ್, ದೇವರಾಜ್, ಪುರ್ಲಹಳ್ಳಿ ರುದ್ರಮುನಿ, ಸದಾನಂದ ಹಾಗೂ ಅಜ್ಜಣ್ಣ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.