ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ, ಜ.3:
ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾದಕ ವ್ಯಸನಗಳು ಹಾಗೂ ದುಶ್ಚಟಗಳ ಕುರಿತು ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಭಾರತ ಸೇವಾದಳ ತಾಲೂಕು ಅಧ್ಯಕ್ಷರೂ, ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎಂ.ಆರ್.ಸಿ. ಮೂರ್ತಿ ಅವರು ಅಭಿಪ್ರಾಯಪಟ್ಟರು.
ಇವರು ಇಂದು ಹೊಸದುರ್ಗ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ ಸೇವಾದಳದ ವತಿಯಿಂದ ಹಮ್ಮಿಕೊಂಡಿದ್ದ ಸೇವಾದಳ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಮಕ್ಕಳು ಬೀಡಿ, ಸಿಗರೇಟು, ಗುಟ್ಕಾ, ತಂಬಾಕು ಮುಂತಾದ ವ್ಯಸನಗಳಿಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರಿಂದ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದೇ ಅಭ್ಯಾಸ ಮುಂದುವರಿದರೆ, ಭವಿಷ್ಯದಲ್ಲಿ ಮಧ್ಯ ವ್ಯಸನಕ್ಕೆ ದಾರಿ ಮಾಡಿಕೊಟ್ಟು ಸಮಾಜ ಹಾಗೂ ಕುಟುಂಬಕ್ಕೆ ಕಂಟಕವಾಗುತ್ತದೆ ಎಂದು ಎಚ್ಚರಿಸಿದರು.
ಮಕ್ಕಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ವಲಯ ಸಂಘಟಕರಾದ ಅಣ್ಣಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತ ಸೇವಾದಳದ ಅಮೃತ ಮಹೋತ್ಸವ ಹಾಗೂ ಸಪ್ತಾಹದ ಕಾರ್ಯಕ್ರಮಗಳನ್ನು ಜಿಲ್ಲಾವ್ಯಾಪಿಯಾಗಿ ಹಮ್ಮಿಕೊಂಡಿರುವ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಹಿರಿಯ ಉಪನ್ಯಾಸಕರಾದ ಹರೀಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ರವಿಕುಮಾರ್, ಶಿವಶಂಕರ್, ಮಂಜುನಾಥ್, ಕೃಷ್ಣಮೂರ್ತಿ ಹಾಗೂ ಭಾರತಮ್ಮ ಉಪಸ್ಥಿತರಿದ್ದರು.
ತಾಲೂಕು ಅಧಿನಾಯಕರಾದ ಮಹಾಂತೇಶ್ ಅವರು ಸ್ವಾಗತಿಸಿ, ತಾಲೂಕಿನಲ್ಲಿ ನಡೆದ ಸೇವಾದಳದ ವಿವಿಧ ಚಟುವಟಿಕೆಗಳ ಕುರಿತು ವಿವರಿಸಿದರು.
ಪ್ರಮೀಳಾ ವಂದಿಸಿದರು. ನಾಗಮಣಿ ಕಾರ್ಯಕ್ರಮ ನಿರೂಪಿಸಿದರು.
About The Author
Discover more from JANADHWANI NEWS
Subscribe to get the latest posts sent to your email.