ಸಿರಿಗೆರೆ:
ಸಮೀಪದ ಕಡ್ಲೇಗುದ್ದುವಿನಲ್ಲಿರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ರಮೇಶ್ ಅವರು, ಶಾಲೆಯಲ್ಲಿ ಸರ್ಕಾರದಿಂದ ಒದಗಿಸಲಾಗುತ್ತಿರುವ ಸೌಲಭ್ಯಗಳಾದ ಪಠ್ಯಪುಸ್ತಕಗಳು, ಹಾಸಿಗೆ ವ್ಯವಸ್ಥೆ ಹಾಗೂ ಸೋಲಾರ್ ವಿದ್ಯುತ್ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು.

ಪೋಷಕರು ಶಾಲೆಯ ನಿಯಮಾವಳಿಗಳಿಗೆ ಬದ್ದರಾಗಿ ನಡೆದುಕೊಳ್ಳಬೇಕು ಹಾಗೂ ಮಕ್ಕಳನ್ನು ಪದೆಪದೆ ಊರಿಗೆ ಕರೆದುಕೊಂಡು ಹೋಗದೆ ಶಾಲೆಯಲ್ಲೇ ಉಳಿಯಲು ಅವಕಾಶ ನೀಡುವಂತೆ ಮನವಿ ಮಾಡಿದರು. ಇಲ್ಲಿಯೇ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಕಳೆದ ಶೈಕ್ಷಣಿಕ ವರ್ಷದಲ್ಲಿ ಇಡೀ ತಾಲ್ಲೂಕಿನಲ್ಲಿಯೇ ಅತ್ಯುತ್ತಮ ಫಲಿತಾಂಶ ಪಡೆಯಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ 6ನೇ ತರಗತಿ ವಿದ್ಯಾರ್ಥಿನಿ ವಿನೀತಾ ಅವರ ಪೋಷಕರಾದ ದೀಪಾ ಅವರು ಮಾತನಾಡಿ, ವಸತಿ ಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಸಂಪೂರ್ಣ ಸುರಕ್ಷತೆ ದೊರೆಯುತ್ತದೆ. ಲಕ್ಷಾಂತರ ರೂಪಾಯಿ ಶುಲ್ಕ ಕಟ್ಟುವ ಖಾಸಗಿ ಶಾಲೆಗಳಿಗಿಂತ ಈ ರೀತಿಯ ಸರ್ಕಾರಿ ವಸತಿ ಶಾಲೆಗಳಲ್ಲಿ ಯಾವುದೇ ಕಡಿಮೆಯಿಲ್ಲದಂತೆ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂದರು.
ಇನ್ನೊಬ್ಬ ಪೋಷಕರಾದ ವಿಶ್ವ ಅವರು, ಮಕ್ಕಳಿಗೆ ಇಲ್ಲಿಯೇ ಪಿಯುಸಿವರೆಗೆ ವಿದ್ಯಾಭ್ಯಾಸ ನೀಡುವ ಉದ್ದೇಶದಿಂದ ವಸತಿ ಕಾಲೇಜು ಮಂಜೂರು ಮಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಸಭೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ವಿಷಯಗಳ ಕುರಿತು ತಯಾರಿಸಿದ್ದ ಮಾದರಿ ಪ್ರದರ್ಶನಗಳು ಪೋಷಕರ ಗಮನ ಸೆಳೆದವು. ಈ ವೇಳೆ ವಸತಿ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.