June 5, 2026
FB_IMG_1780660260354.jpg

ಚಿತ್ರದುರ್ಗಜೂ.05:
ಕಕ್ಷಿದಾರರು ಹಾಗೂ ಸಾರ್ವಜನಿಕರು ತಮ್ಮ ನ್ಯಾಯಾಲಯದ ಪ್ರಕರಣಗಳನ್ನು ಸುಲಭ ಮತ್ತು ಶೀಘ್ರವಾಗಿ ಬಗೆಹರಿಸಿಕೊಳ್ಳಲು ವಿಶೇಷ ಲೋಕ್ ಅದಾಲತ್‍ಗಳು ಅತ್ಯುತ್ತಮ ವೇದಿಕೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಿ.ಜೆ.ಸುದೀನ್ ಕುಮಾರ್ ಹೇಳಿದರು.
ಇಲ್ಲಿನ ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಲೋಕ್ ಅದಾಲತ್‍ಗಳನ್ನು ಆಯೋಜಿಸಲಾಗುತ್ತಿದ್ದು, ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೋರಿದರು.
ಜುಲೈ 11 ರಂದು ರಾಷ್ಟ್ರೀಯ ಲೋಕ್ ಅದಾಲತ್: ಜುಲೈ 11ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ಜರುಗಲಿದೆ. ಅಂದು ಎಂದಿನಂತೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅಗತ್ಯವಿರುವ ಎಲ್ಲಾ ಪೂರಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕಕ್ಷಿದಾರರು ತಮ್ಮ ಪ್ರಕರಣಗಳ ಬಗ್ಗೆ ಮುಂಚಿತವಾಗಿಯೇ ಮಾಹಿತಿ ನೀಡಿದಲ್ಲಿ, ಎದುರುದಾರರಿಗೆ ನೋಟಿಸ್ ಅಥವಾ ಸೂಚನೆ ಕಳುಹಿಸಿ, ಅವರನ್ನೂ ಆ ದಿನ ಹಾಜರಿರುವಂತೆ ವ್ಯವಸ್ಥೆ ಮಾಡಲಾಗುವುದು. ಕಕ್ಷಿದಾರರು ನೇರವಾಗಿ ಅಥವಾ ತಮ್ಮ ವಕೀಲರ ಮೂಲಕ ಪ್ರಾಧಿಕಾರವನ್ನು ಸಂಪರ್ಕಿಸಿ ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಒಳಪಡಿಸಬಹುದು ಎಂದು ತಿಳಿಸಿದರು.
ಚೆಕ್ ಬೌನ್ಸ್ ಪ್ರಕರಣಗಳ ವಿಶೇಷ ಅದಾಲತ್ ಜುಲೈ 18ಕ್ಕೆ : ಲಿಖಿತ ವರ್ಗಾವಣೆಯ ಅಧಿನಿಯಮದ (ಎನ್.ಐ. ಆಕ್ಟ್ – ಚೆಕ್ ಬೌನ್ಸ್) ಪ್ರಕರಣಗಳಿಗಾಗಿಯೇ ಜುಲೈ 18ಕ್ಕೆ ವಿಶೇಷ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಶೀಘ್ರ ಪರಿಹಾರ ಬಯಸುವ ಹಾಗೂ ರಾಜಿ ಮಾಡಿಕೊಳ್ಳಲು ಇಚ್ಛಿಸುವ ದೂರುದಾರರು ಮತ್ತು ಆರೋಪಿಗಳು ಈ ವಿಶೇಷ ಅದಾಲತ್‍ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಸರ್ವೋಚ್ಚ ನ್ಯಾಯಾಲಯವು ಲೋಕ್ ಅದಾಲತ್‍ಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಪ್ರತಿಯೊಬ್ಬರಿಗೂ ತಮ್ಮ ಪ್ರಕರಣಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಿದೆ. ಈ ನಿಟ್ಟಿನಲ್ಲಿ ‘ಸಮಾಧಾನ್ ಸಮಾರೋಹ’ ಎಂಬ ವಿಶೇಷ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ನ್ಯಾಯಾಲಯ, ಜಿಲ್ಲಾ ನ್ಯಾಯಾಲಯದ ಅಧೀನಕ್ಕೆ ಒಳಪಡುವ ಎಲ್ಲಾ ವಿಚಾರಣಾ ನ್ಯಾಯಾಲಯಗಳು ಹಾಗೂ ತಾಲೂಕು ಮಟ್ಟದ ಕಾನೂನು ಸೇವಾ ಸಮಿತಿಗಳು ಈ ಪ್ರಕ್ರಿಯೆಗೆ ಸಂಪೂರ್ಣವಾಗಿ ಸಹಕರಿಸಲಿವೆ. ಸಾರ್ವಜನಿಕರು ಮತ್ತು ವ್ಯಾಜ್ಯಕಾರರು ನ್ಯಾಯಾಲಯದ ಕಲಾಪಗಳ ಅಲೆದಾಟವನ್ನು ತಪ್ಪಿಸಿ, ಶೀಘ್ರ ನ್ಯಾಯ ಪಡೆಯಲು ಈ ಅದಾಲತ್‍ಗಳ ಮುಂದಾಗಬೇಕು ಎಂದರು.
ಸರ್ವೋಚ್ಚ ನ್ಯಾಯಾಲಯ ಆಗಸ್ಟ್ 21, 22 ಮತ್ತು 23ರಂದು ‘ಸಮಾಧಾನ್ ಸಮಾರೋಹ್ 2026′ ಹೆಸರಿನಲ್ಲಿ ರಾಜಿ ಸಂಧಾನ ಮತ್ತು ಮಧ್ಯಸ್ಥಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಪೂರ್ವಭಾವಿಯಾಗಿ, ಜಿಲ್ಲಾ ನ್ಯಾಯಾಲಯ ಮತ್ತು ಅದರ ಅಧೀನ ನ್ಯಾಯಾಲಯಗಳಿಂದ ವಿಲೇವಾರಿಯಾಗಿ, ಉಚ್ಚ ನ್ಯಾಯಾಲಯದ ಮೂಲಕ ಸರ್ವೋಚ್ಚ ನ್ಯಾಯಾಲಯದಲ್ಲಿ ಸದ್ಯ ಅಪೀಲುಗಳಲ್ಲಿ ಬಾಕಿ ಇರುವ 32 ಪ್ರಕರಣಗಳ ಪಟ್ಟಿಯನ್ನು ರಾಜ್ಯ ಪ್ರಾಧಿಕಾರದಿಂದ ಇಲ್ಲಿಗೆ ಕಳುಹಿಸಿಕೊಡಲಾಗಿದೆ. ಈಗಾಗಲೇ ಈ 32 ಪ್ರಕರಣಗಳ ಪಕ್ಷಗಾರರಿಗೆ ಮತ್ತು ಅವರ ವಕೀಲರಿಗೆ ಮಾಹಿತಿ ನೀಡಿ, ಅವರನ್ನು ಮಧ್ಯಸ್ಥಿಕೆಗಾರರ ಮುಂದೆ ಹಾಜರುಪಡಿಸಿ ಸಂಧಾನ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಪ್ರಕ್ರಿಯೆ ಮುಗಿದ ನಂತರ ಇದರ ವರದಿಯನ್ನು ರಾಜ್ಯ ಪ್ರಾಧಿಕಾರಕ್ಕೆ ಸಲ್ಲಿಸಲಾಗುವುದು ಎಂದು ವಿವರಿಸಿದರು.
ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಜಿಲ್ಲೆಯ ಆಯಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಹಾಗೂ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಂಪರ್ಕಿಸಬಹುದು ಎಂದು ತಿಳಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading