March 17, 2026
1762346640397.jpg

ಚಿತ್ರದುರ್ಗ ನ.05:
ಜಿಲ್ಲೆಯಾದ್ಯಂತ ತಂಬಾಕು ನಿಯಂತ್ರಣ ಕಾಯ್ದೆ ಕುರಿತ ಕಾರ್ಯಾಚರಣೆಯನ್ನು ಹೆಚ್ಚಳ ಮಾಡುವ ಮೂಲಕ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಬಾಕು ನಿಯಂತ್ರಣಕ್ಕಾಗಿ ಇರುವ ಕೋಟ್ಪಾ ಕಾಯ್ದೆಯನ್ನು ತಾಲ್ಲೂಕು ಹಂತಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ತಂಬಾಕು ಕಾರ್ಯಾಚರಣೆಗಾಗಿ ತಾಲ್ಲೂಕುವಾರು ಗುರಿನಿಗದಿಪಡಿಸಿ, ಪ್ರಗತಿ ಸಾಧಿಸಬೇಕು ಎಂದು ತಾಕೀತು ಮಾಡಿದರು.
ಕೋಟ್ಪಾ ಕಾಯ್ದೆಯ ಕಟ್ಟುನಿಟ್ಟಿನ ಜಾರಿಗಾಗಿ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‍ಗಳ ಅಧ್ಯಕ್ಷತೆಯಲ್ಲಿ ನಿಯಮಿತವಾಗಿ ಸಮಿತಿ ಸಭೆಗಳನ್ನು ನಡೆಸಬೇಕು. ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಸಮಿತಿಗಳು ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಿಗೆ ಪದೇ ಪದೇ ದಾಳಿ ನಡೆಸಿ, ಕಾಯ್ದೆ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಪಟ್ಟಣ ಪಂಚಾಯಿತಿ ಪುರಸಭೆ, ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಹ ತಂಬಾಕು ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಹಾಗೂ ತಂಬಾಕು ಉತ್ಪನ್ನಗಳನ್ನು ದುಷ್ಪಾರಿಣಾಮಗಳ ಬಗ್ಗೆ ವಿಶೇಷವಾಗಿ ಬೀದಿಬದಿ ವ್ಯಾಪಾರಿಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಾದ್ಯಂತ ಎಲ್ಲಾ ದೇವಸ್ಥಾನಗಳನ್ನು, ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತಗೊಳಿಸಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಾದ್ಯಂತ ಕನಿಷ್ಟ 30 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳೆಂದು 9ನೇ ಡಿಸೆಂಬರ್ ಒಳಗಾಗಿ ಘೋಷಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್ ಮಾತನಾಡಿ, ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಪೊಲೀಸ್, ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ತಂಡದಿಂದ ಕಾರ್ಯಾಚರಣೆ ಆಗಬೇಕು. ತಂಬಾಕು ಕಾರ್ಯಾಚರಣೆಯಲ್ಲಿ ಸಮಿತಿಯ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಜಿಲ್ಲೆಯಾದ್ಯಂತ 9ನೇ ಡಿಸೆಂಬರ್ ಒಳಗಾಗಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಮಹಾಂತೇಶ್ ಮಾತನಾಡಿ, 2025ರ ಜುಲೈ ರಿಂದ ಸೆಪ್ಟೆಂಬರ್ 2025ರ ವರೆಗೆ ತಂಬಾಕು ಕಾರ್ಯಾಚರಣೆಗೆ ಸಂಬಂಧಿಸಿಂತೆ ಜಿಲ್ಲೆಯಲ್ಲಿ 72 ಗುರಿ ನಿಗದಿಪಡಿಸಲಾಗಿದ್ದು, 23 ಪ್ರಗತಿ ಸಾಧಿಸಲಾಗಿದೆ. ಒಟ್ಟು 421 ಪ್ರಕರಣಗಳು ದಾಖಲಾಗಿದ್ದು, ರೂ.44,400 ದಂಡ ವಿಧಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ತಹಶೀಲ್ದಾರ್ ಗೋವಿಂದರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಸೇರಿದಂತೆ ಆರೋಗ್ಯ ಇಲಾಖೆಯ ತಾಲ್ಲೂಕು ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading