ನಾಯಕನಹಟ್ಟಿ: ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದ ಲಾಭ ಮುಂದಿನ ದಿನಗಳಲ್ಲಿ ಬಿಜೆಪಿಗೆ ದೊರೆಯಲಿದೆ ಎಂದು ಮೊಳಕಾಲ್ಮೂರು ಬಿಜೆಪಿ ಮುಖಂಡ ಎನ್. ರಘುಮೂರ್ತಿ ಹೇಳಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಜನಾಂದೋಲನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಎನ್ಡಿಎ ಪರ ಅಲೆ ಕಂಡುಬರುತ್ತಿದೆ ಎಂದು ಹೇಳಿದರು.
ಕಳೆದ ಮೂರು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಎಸ್ಸಿಪಿ–ಟಿಎಸ್ಪಿ ಅನುದಾನ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಹಾಗೂ ಭಾಗ್ಯಲಕ್ಷ್ಮಿ ಯೋಜನೆಯ ಹಣದ ದುರುಪಯೋಗದ ಆರೋಪಗಳು ಕೇಳಿಬಂದಿವೆ. ಇದರಿಂದಾಗಿ ರಾಜ್ಯದ ಜನರಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು.
ಕೆಪಿಎಸ್ಸಿ ಹಗರಣ ಸೇರಿದಂತೆ ವಿವಿಧ ನೇಮಕಾತಿ ಪ್ರಾಧಿಕಾರಗಳ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿರುವ ಲೋಪಗಳ ಬಗ್ಗೆಯೂ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ರಾಜ್ಯದ ಜನರು 2028ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಬದಲಾವಣೆಗೆ ತೀರ್ಮಾನಿಸಿದ್ದಾರೆ ಎಂದು ರಘುಮೂರ್ತಿ ಹೇಳಿದರು.
ದೇಶದಲ್ಲಿ ಉತ್ತಮ ಆಡಳಿತ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಕಾರ್ಯವೈಖರಿಯನ್ನು ಜನರು ಮೆಚ್ಚುತ್ತಿದ್ದಾರೆ. ಮೋದಿ ಅವರು ತಮ್ಮ ಜೀವನವನ್ನು ದೇಶ ಹಾಗೂ ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದು, ಅವರ ಬಗ್ಗೆ ದೇಶದ ಜನರಲ್ಲಿ ಅಪಾರ ಗೌರವ ಮತ್ತು ವಿಶ್ವಾಸವಿದೆ ಎಂದರು.
ಬಳ್ಳಾರಿ ಜಾತಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರ ಭಾಗವಹಿಸುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಿವಿಧೆಡೆ ಸಾರ್ವಜನಿಕರಿಂದ ಬೆಂಬಲ ವ್ಯಕ್ತವಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಾತಾದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಜಾತಾವು ರಾಜ್ಯದಲ್ಲಿ ಆಡಳಿತ ಬದಲಾವಣೆಗೆ ಮುನ್ನುಡಿ ಬರೆಯಲಿದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವರಾದ ಸಿ.ಟಿ. ರವಿ, ಬಿ. ಶ್ರೀರಾಮುಲು, ಜನಾರ್ದನ ರೆಡ್ಡಿ ಹಾಗೂ ಸಂಸದ ಗೋವಿಂದ ಕಾರಜೋಳ ಸೇರಿದಂತೆ ರಾಜ್ಯ ಮಟ್ಟದ ಬಿಜೆಪಿ ನಾಯಕರ ನೇತೃತ್ವದಲ್ಲಿ ಜಾತಾ ಯಶಸ್ವಿಯಾಗಿ ಸಾಗುತ್ತಿದೆ ಎಂದು ರಘುಮೂರ್ತಿ ಹೇಳಿದರು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ತಂಡದಿಂದ ವಕೀಲ ಪ್ರದೀಪ್ ಕೋನಸಾಗರ, ಪ್ರಕಾಶ್ ಕೊಂಡ್ಲಹಳ್ಳಿ, ಶ್ರೀನಿವಾಸ್ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರು ಜಾತಾದಲ್ಲಿ ಭಾಗವಹಿಸಿದ್ದರು.








About The Author
Discover more from JANADHWANI NEWS
Subscribe to get the latest posts sent to your email.