ಚಿತ್ರದುರ್ಗಮೇ08:
ಮಕ್ಕಳಲ್ಲಿ ಅಡಗಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಲು ಬಾಲ ಭವನದ ಚಟುವಟಿಕೆಗಳು ಪೂರಕವಾಗಿವೆ. ಪ್ರಯತ್ನ ಮತ್ತು ಏಕಾಗ್ರತೆ ಮೈಗೂಡಿಸಿಕೊಂಡರೆ ಕ್ರಿಯಾಶೀಲ ವ್ಯಕ್ತಿತ್ವ ರೂಪಿಸಿಕೊಳ್ಳಲು ಇಂತಹ ಬೇಸಿಗೆ ಶಿಬಿರಗಳು ಸಹಕಾರಿ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ ತಿಳಿಸಿದರು.



ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತಾಶ್ರಯದಲ್ಲಿ ನಗರದ ಬಾಲ ಭವನ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 15 ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ಸಂಶೋಧನೆಗಳ ಪ್ರಕಾರ, ಬೇಸಿಗೆ ರಜೆಯಲ್ಲಿ ಮಕ್ಕಳು ಅತಿಯಾಗಿ ಮೊಬೈಲ್ ಮತ್ತು ಟಿವಿ ನೋಡುವುದರಿಂದ ಅವರಲ್ಲಿ ವಿಶೇಷ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇಂತಹ ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಸಮಯದ ಸದುಪಯೋಗ ಪಡಿಸಿಕೊಳ್ಳಲು ಶಿಬಿರಗಳು ಉತ್ತಮ ವೇದಿಕೆ. ಶಿಬಿರದಲ್ಲಿ ಮಕ್ಕಳು ಸಂಗೀತ, ನಾಟಕ, ಚಿತ್ರಕಲೆ, ಯೋಗ, ಕರಾಟೆ ಹಾಗೂ ನೃತ್ಯಗಳನ್ನು ಕಲಿತು ಪ್ರದರ್ಶಿಸುತ್ತಿರುವುದು ಸಂತೋಷದ ವಿಷಯ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಪ್ರಭಾರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀಣಾ ಮಾತನಾಡಿ, ಕಲಿಯುವ ವಯಸ್ಸಿನಲ್ಲಿ ಮಕ್ಕಳು ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ಈ ಬಾರಿ ಅಗ್ನಿಶಾಮಕ ದಳದ ಪ್ರಾತ್ಯಕ್ಷಿಕೆ, ಉರಗ ಪರಿಚಯ ಹಾಗೂ ಮಾತನಾಡುವ ಗೊಂಬೆ ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯಾಗಿದ್ದವು ಎಂದು ತಿಳಿಸಿದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳಾ ಮಾತನಾಡಿ, ಪೋಷಕರು ಓದು-ಬರಹದ ಜೊತೆಗೆ ಮಕ್ಕಳ ಸೃಜನಾತ್ಮಕ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಬೇಕು ಎಂದರು.
ಜಿಲ್ಲಾ ಬಾಲ ಭವನ ವ್ಯವಸ್ಥಾಪಕ ಪಿ.ಸುರೇಶ್ ಮಾತನಾಡಿ, ಈ ಬಾರಿಯ ಶಿಬಿರದಲ್ಲಿ 95 ಮಕ್ಕಳು ನೋಂದಾಯಿಸಿಕೊಂಡು ಯಶಸ್ವಿಯಾಗಿ ತರಬೇತಿ ಪೂರೈಸಿದ್ದಾರೆ ಎಂದರು.
ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ. ಶ್ರೀಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿವಿಧ ಕೌಶಲ್ಯಗಳ ತರಬೇತಿ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬಾಲಕರ ಬಾಲ ಮಂದಿರದ ಅಧೀಕ್ಷಕ ಸಂತೋಷ್ ಮಂಜುನಾಥ್, ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ವಿನೋದಮ್ಮ, ಸಂಪನ್ಮೂಲ ವ್ಯಕ್ತಿಗಳಾದ ಕುಮಾರಸ್ವಾಮಿ, ತಿಪ್ಪೇರುದ್ರಪ್ಪ, ಮಂಜುಳಾ ಹವನೂರ್, ಚಂದನ, ಪವಿತ್ರ ಮತ್ತಿತರರು ಇದ್ದರು. ಶಿಬಿರದಲ್ಲಿ ಮಕ್ಕಳು ಸಿದ್ಧಪಡಿಸಿದ ವಿವಿಧ ಕರಕುಶಲ ವಸ್ತುಗಳು ಹಾಗೂ ಚಿತ್ರಕಲೆಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಸಮಾರೋಪದ ನಂತರ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
About The Author
Discover more from JANADHWANI NEWS
Subscribe to get the latest posts sent to your email.