September 15, 2025


ಹಿರಿಯೂರು:
ನಗರದಲ್ಲಿ ವಾಹನಗಳ ಸಂಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಾಹನಸವಾರರು ಹಾಗೂ ಸಾರ್ವಜನಿಕರು ಸುಗಮವಾಗಿ ಸಂಚಾರಿಸಲು ಕಷ್ಟಪಡುವಂತಾಗಿದ್ದು, ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆಯ ಅಗಲೀಕರಣಕ್ಕೆ ಮುಂದಾಗಿದ್ದೇವೆ ಎಂಬುದಾಗಿ ನಗರಸಭೆ ಅಧ್ಯಕ್ಷರಾದ ಎ.ಅಜಯ್ ಕುಮಾರ್ ಅವರು ಹೇಳಿದರು.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಧ್ಯಕ್ಷರು ನಗರದಲ್ಲಿ ಹಾದು ಹೋಗುವ ಬೀದರ್- ಶ್ರೀರಂಗಪಟ್ಟಣ ರಸ್ತೆಯ ಅಗಲೀಕರಣಕ್ಕೆ ಸಂಬಂಧಿಸಿದಂತೆ ಮೊದಲಿಗೆ ವೇದಾವತಿ ನದಿ ಸೇತುವೆ ಬಳಿ ಇರುವ ರೆಡ್ಡಿಮಿಲಿಟರಿ ಹೋಟಲ್ ಪಕ್ಕದಲ್ಲಿರುವ ನಗರಸಭೆಗೆ ಸೇರಿದ ಸುಂಕ ವಸೂಲಿ ಮಾಡುವ ಹಳೆಯ ಕಟ್ಟಡವನ್ನು ತೆರುವುಗೊಳಿಸಲಾಗುತ್ತಿದೆ ಎಂಬುದಾಗಿ ಅವರು ತಿಳಿಸಿದರು.
ಈ ರಸ್ತೆ ಪಕ್ಕದಲ್ಲಿಯೇ ಶ್ರೀ ಸತ್ಯನಾರಾಯಣಸ್ವಾಮಿ ದೇವಸ್ಥಾನವಿದ್ದು ದೇವಸ್ಥಾನದ ಆಡಳಿತ ಮಂಡಳಿಯವರೊಂದಿಗೂ ಈ ಬಗ್ಗೆ ಸೌಹಾರ್ದಯುತವಾಗಿ ಚರ್ಚಿಸಲಾಗಿದ್ದು, ಅಗತ್ಯವಿರುಷ್ಟು ಜಾಗವನ್ನು ತೆರವುಗೊಳಿಸಿಕೊಡಲು ಆಡಳಿತ ಮಂಡಳಿಯವರು ಸಮ್ಮತಿಸಿದ್ದು ನಗರದ ರಸ್ತೆ ಅಗಲೀಕರಣಕ್ಕೆ ಎಲ್ಲಾ ರೀತಿಯ ಸಹಕಾರ ಕೊಡುವುದಾಗಿ ಆಡಳಿತ ಮಂಡಳಿಯವರು ತಿಳಿಸಿದ್ದಾರೆ ಎಂಬುದಾಗಿ ಅವರು ಹೇಳಿದರು.
ನಗರಸಭೆ ಪೌರಾಯುಕ್ತರಾದ ಎ.ವಾಸಿಂ ರವರು ಮಾತನಾಡಿ ನಗರದ ವಾಹನ ಸವಾರರು ಹಾಗೂ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ನಗರಸಭೆ ವತಿಯಿಂದ ರಸ್ತೆ ಅಗಲೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದ್ದು, ನಗರದ ನಾಗರೀಕರು ಹಾಗೂ ಸಾರ್ವಜನಿಕರು ನಗರಸಭೆಯೊಂದಿಗೆ ಕೈಗೋಡಿಸುವ ಮೂಲಕ ಈ ಕಾರ್ಯ ಯಶಸ್ವಿಯಾಗಲು ಸಹಕರಿಸಬೇಕು ಎಂಬುದಾಗಿ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್, ನಗರಸಭೆ ಪೌರಾಯುಕ್ತರಾದ ಎ.ವಾಸಿಂ, ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ನಗರಸಭೆ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಶ್ರೀಮತಿ ಶಿವರಂಜಿನಿಯಾದವ್, ಸೇರಿದಂತೆ ನಗರಸಭೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading