February 10, 2026
FB_IMG_1770648097047.jpg

ಚಿತ್ರದುರ್ಗಫೆ.09:
ಆರೋಗ್ಯವಂತ ಮಕ್ಕಳು ಆರೋಗ್ಯವಂತ ರಾಷ್ಟ್ರದ ಅಡಿಪಾಯ. ಜಂತುಹುಳು ಸೋಂಕನ್ನು ಆಲ್ಬೆಂಡಜೋಲ್ ಮಾತ್ರೆ ಸೇವನೆಯಿಂದ ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂದು ಚಿತ್ರದುರ್ಗ ತಾಲ್ಲೂಕಿನ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು ತಿಳಿಸಿದರು.
ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂತರ್ ಇಲಾಖೆ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಹಾಗೂ ಫೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ರಾಷ್ಟ್ರೀಯ ಕಾರ್ಯಕ್ರಮಗಳ ಯಶಸ್ವಿಗೆ ಪೂರ್ವಸಿದ್ಧತೆ ಬಹು ಮುಖ್ಯವಾಗಿದ್ದು, ಒಂದು ವರ್ಷದಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ತಪ್ಪದೇ ಜಂತುಹುಳು ನಿವಾರಣಾ ಮಾತ್ರೆಯನ್ನು ಸೇವಿಸಬೇಕು. ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಶಾಲೆ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ಈಗಾಗಲೇ ಮಾತ್ರೆಗಳನ್ನು ವಿತರಿಸಲಾಗಿದೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ಮಕ್ಕಳು ಮತ್ತು ಶಾಲೆ ಬಿಟ್ಟಿರುವ ಯಾವುದೇ ಮಗು ಈ ಸೌಲಭ್ಯದಿಂದ ವಂಚಿತರಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ವಿಶೇಷವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಾಗಿದ್ದು, ಅಲ್ಲಿನ ವಿದ್ಯಾರ್ಥಿಗಳಿಗೂ ಮಾತ್ರೆ ತಲುಪಿಸಲು ತಾಲ್ಲೂಕು ಆರೋಗ್ಯಾಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ಅವರು ಮಾರ್ಗದರ್ಶನ ನೀಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ್ ಮಾತನಾಡಿ, ಬರಿಗಾಲಿನಲ್ಲಿ ಆಟವಾಡುವುದು, ತೆರೆದ ಮಲವಿಸರ್ಜನೆ ಮತ್ತು ನೈರ್ಮಲ್ಯದ ಕೊರತೆಯಿಂದ ಕರುಳಿನಲ್ಲಿ ಜಂತುಹುಳುಗಳು ಉತ್ಪತ್ತಿಯಾಗುತ್ತವೆ. ಪ್ರತಿ ಆರು ತಿಂಗಳಿಗೊಮ್ಮೆ ಮಾತ್ರೆ ಸೇವಿಸುವುದರಿಂದ ಇದನ್ನು ನಿವಾರಿಸಬಹುದು. ತಾಲ್ಲೂಕಿನಲ್ಲಿ ಈ ಬಾರಿ 1,14,291 ಮಕ್ಕಳನ್ನು ಗುರಿಯಾಗಿಸಿಕೊಂಡು ಫೆಬ್ರವರಿ 10 ರಂದು ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಂದು ಮಾತ್ರೆ ಪಡೆಯದವರಿಗೆ ಫೆಬ್ರವರಿ 17 ರಂದು ‘ಮ್ಯಾಪ್-ಅಪ್ ಡೇ’ ಮೂಲಕ ಮಾತ್ರೆ ನೀಡಲಾಗುವುದು. 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧ ಮಾತ್ರೆ (ಪುಡಿ ಮಾಡಿ) ಹಾಗೂ 2 ವರ್ಷ ಮೇಲ್ಪಟ್ಟವರಿಗೆ 400 ಮಿ.ಗ್ರಾಂ ನ ಒಂದು ಪೂರ್ಣ ಮಾತ್ರೆಯನ್ನು ನೀಡಲಾಗುತ್ತದೆ. ಎಲ್ಲಾ ಶಿಕ್ಷಣ ಸಂಸ್ಥೆಗಳು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಂಡು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿ.ಡಿ.ಪಿ.ಓ ವೀಣಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಆರ್‍ಬಿಎಸ್‍ಕೆ ವೈದ್ಯಾಧಿಕಾರಿಗಳಾದ ಡಾ. ಮಹೇಂದ್ರ, ಡಾ. ಮಂಜುಳಾ, ಡಾ. ವಾಣಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಅಕ್ಷತಾ, ಪೂಜಾ, ಆಶಾ ಮೇಲ್ವಿಚಾರಕಿ ತಬಿತಾ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮಹಮ್ಮದ್ ಆಲಿ, ಲೆಕ್ಕ ಸಹಾಯಕರಾದ ಅಬಿಬ್ ಉಲ್ಲಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading