
ಚಿತ್ರದುರ್ಗ ಅ.09:
ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಳವಾಗಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ್ ವಾಸುದೇವ ಹೇಳಿದರು.
ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ಕಾನೂನು ಸೇವಾ ಪ್ರಾಧಿಕಾರ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾದ “ವಿಧಾನ್ ಸೇ ಸಮಾಧಾನ್” ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಮಹಿಳೆಯರ ಗೌರವಕ್ಕೆ ಚ್ಯುತಿ ಬರದ ಹಾಗೆ ನಡೆದುಕೊಳ್ಳುವಂತೆ ಹೇಳಲಾಗಿದೆ. ಆದಾಗ್ಯೂ ಸಹ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಕಡಿಮೆ ಆಗಿಲ್ಲ. ಮೂಲಭೂತ ಹಕ್ಕುಗಳ ಕೇಳುವ ನಾವು ಮೂಲಭೂತ ಕರ್ತವ್ಯಗಳನ್ನು ಸಹ ಚಾಚು ತಪ್ಪದೇ ಪಾಲಿಸಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಸತಿ ಪದ್ದತಿ ನಿಷೇಧ ಕಾನೂನು ಜಾರಿಗೆ ತರಲಾಗಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ 16 ಪ್ರಮುಖ ಕಾಯ್ದೆಗಳನ್ನು ಮಹಿಳೆಯರ ಸಬಲೀಕರಣ ಹಾಗೂ ರಕ್ಷಣೆಗಾಗಿ ಜಾರಿಗೆ ತರಲಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಬಂದ ತರುವಾಯ ಜಾರಿಗೊಳಿಸಿದ ಹಿಂದೂ ಉತ್ತರಾಧಿಕಾರಿ ಕಾಯ್ದೆ ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೆ ಪಾಲು ನೀಡಿದೆ. ಈ ಮೂಲಕ ಮಹಿಳೆಯರಿಗೆ ಸಮಾನತೆ ದೊರಕಿಸಿಕೊಡುವ ಕೆಲಸ ಮಾಡಲಾಗಿದೆ. ಇದರ ಹೊರತಾಗಿ ಹಿಂದೂ ಪೋಷಕ ಕಾಯ್ದೆಯಡಿ ಮಹಿಳೆಗೆ ಪೋಷಕತ್ವದ ಹಕ್ಕು ನೀಡಲಾಯಿತು. ಮಹಿಳೆಯರು ಮಕ್ಕಳನ್ನು ದತ್ತು ತೆಗದುಕೊಳ್ಳಲು ಅವಕಾಶ ನೀಡಲಾಗಿದೆ. ಮಹಿಳೆಯರ ಕಳ್ಳ ಸಾಗಣೆ ತಡೆಯಲು ಮಾನವ ಕಳ್ಳ ಸಾಗಾಣಿಕೆ ನಿಷೇಧ ಕಾಯ್ದೆ, ಗೃಹ ಹಿಂಸೆಯಿಂದ ರಕ್ಷಣೆ, ವರದಕ್ಷಿಣೆ ನಿಷೇಧ , ಕೆಲಸದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಕಾಯ್ದೆ ತರಲಾಗಿದೆ. ಗರ್ಭಪಾತ ನಿಷೇಧ ಕಾಯ್ದೆ, ಭ್ರೂಣಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಮಹಿಳೆಯ ಸಬಲೀಕರಣ ಹಾಗೂ ರಕ್ಷಣೆಗೆ ಸಹಕಾರಿಯಾಗಿವೆ. ಇದರೊಂದಿಗೆ ಕೆಲಸ ಮಾಡುವ ಮಹಿಳೆಯರಿಗಾಗಿ ಸಮಾನ ವೇತನ ಹಾಗೂ ತಾಯ್ತನದ ಸೌಲಭ್ಯ ಕಾಯ್ದೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರಾದ ರೋಣ್ ವಾಸುದೇವ ತಿಳಿಸಿದರು.
ರಾಷ್ಟ್ರೀಯ ಮಹಿಳಾ ಆಯೋಗದ ರಚನೆ ಕಾಯ್ದೆ ಜಾರಿ ಮಾಡಿ, ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಶಾಶ್ವತ ಮಹಿಳಾ ಆಯೋಗ ಸ್ಥಾಪಿಸಲಾಗಿದೆ. ಇದೆಲ್ಲದರ ಹೊರತಾಗಿಯೂ ಮಹಿಳೆಯರ ರಕ್ಷಣೆ ಹಾಗೂ ಹಕ್ಕುಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶ ಎಂ.ವಿಜಯ್ ಮಾತನಾಡಿ, ಬ್ಲಾಕ್ ಹಂತದಲ್ಲಿ ಮಹಿಳೆಯರ ಸಬಲೀಕರಣ ಸಲುವಾಗಿ ಸರ್ವೋಚ್ಚ ನ್ಯಾಯಾಲಯದ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದಿಂದ ವಿಧಾನ್ ಸೇ ಸಮಾಧಾನ್ ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊದಲ ಹಂತದಲ್ಲಿ ರಾಷ್ಟ್ರದ ಪ್ರಮುಖ 11 ರಾಜ್ಯಗಳಲ್ಲಿ ಜಾಗೃತಿ ಕಾರ್ಯಕ್ರಮಗಳಿಗೆ ನಡೆಸಲಾಗುತ್ತಿದೆ ಎಂದರು.
2022 ಎನ್.ಸಿ.ಆರ್.ಬಿ ದತ್ತಾಂಶಗಳ ಅನುಸಾರ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.4 ರಷ್ಟು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಗೃಹ ಹಿಂಸೆ, ಕೆಲಸದ ಸ್ಥಳದಲ್ಲಿ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಏರಿಕೆ ಆಗಿರುವುದು ಕಳವಳ ಮೂಡಿಸಿದೆ. ಮಹಿಳೆಯರ ದೌರ್ಜನ್ಯ ವಿರುದ್ಧ ಪ್ರಕರಣಗಳ ಪೈಕಿ ಶೇ.10 ರಷ್ಟು ಪ್ರಕರಣಗಳು ಸೈಬರ್ ರೂಪದ ಅಪರಾಧಗಳು ಆಗಿವೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್ ಮಾತನಾಡಿ, ವಿಶ್ವ ಸಂಸ್ಥೆ 2030 ಸುಸ್ಥಿರ ಅಭಿವೃದ್ಧಿ ಗುರಿಯಲ್ಲಿ, ಮಹಿಳೆಯರ ವಿರುದ್ಧದ ತಾರತಮ್ಯ ತೊಡೆದು ಹಾಕಿ ಲಿಂಗ ಸಮಾನತೆ ತರುವ ಯೋಜನೆ ರೂಪಿಸಿದೆ. ಇದನ್ನು ಸಾಧಿಸಲು ನಮ್ಮ ಮನೋಭಾವದಲ್ಲಿ ಬದಲಾವಣೆ ಮೂಡಬೇಕಿದೆ. ಸಮಾಜದ ಅಂಚಿನಲ್ಲಿರುವ ಮಹಿಳೆಯರನ್ನು ಮುಖ್ಯವಾಹಿನಿಗೆ ತರಬೇಕು. ರಾಜ್ಯ ಸರ್ಕಾರವು ಸಹ ಲಿಂಗ ಸಮಾನತೆ ತರಲು ಅನೇಕ ಕಾರ್ಯಕ್ರಮ ಜಾರಿಗೊಳಿಸಿದೆ. ಜಿಲ್ಲಾ ಪಂಚಾಯಿತಿ 189 ಗ್ರಾಮ ಪಂಚಾಯಿತಿಗಳ ಕಸ ವಿಲೇವಾರಿ ವಾಹನಗಳ ಚಾಲನೆಯ ತರಬೇತಿಯನ್ನು ನೀಡಲಾಗಿದೆ. ನರೇಗಾದಡಿ ಕೆಲಸ ಮಾಡುವ ಮಹಿಳೆಯ ಪುಟ್ಟ ಮಕ್ಕಳನ್ನು ನೋಡಿಕೊಳ್ಳಲು ಕೂಸಿನ ಮನೆಗಳನ್ನು ನಿರ್ಮಿಸಲಾಗಿದೆ. ಗ್ರಾ.ಪಂಗಳಲ್ಲಿ ನಲ್ ಜಲ್ ಮಿತ್ರ ಎನ್ನುವ ಕಾರ್ಯಕ್ರಮ ಜಾರಿ ಮಾಡಿ ಮಹಿಳೆಯರಿಗೂ ಸಹ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆಗಳಲ್ಲಿ ಕೆಲಸ ನಿರ್ವಹಿಸಲು ಆಯ್ದ ಮಹಿಳೆಯರಿಗೆ ತರಬೇತಿ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸರಸ್ವತಿ ಕಾನೂನು ಕಾಲೇಜ್ ಸಹಾಯಕ ಪ್ರಾಧ್ಯಾಪಕ ಡಾ.ಎನ್.ಡಿ.ಗೌಡ ಅವರು ಡಿವಿ ಆಕ್ಟ್ ಬಿಎನ್ಎಸ್ ಅಡಿಯಲ್ಲಿ ಕ್ರೌರ್ಯ ಮತ್ತು ವರದಕ್ಷಿಣೆ ಕಿರುಕುಳ ಕುರಿತು ಉಪನ್ಯಾಸ ನೀಡಿದರು. ಮನೋವೈದ್ಯ ಡಾ.ಮಂಜುನಾಥ್ ಸಿ.ಜೆ.ಹಳ್ಳಿ ಅವರು ಕೌಟುಂಬಿಕ ಹಿಂಸಾಚಾರ ಮತ್ತು ಇದು ಮಹಿಳೆಯರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮದ ಕುರಿತು ಹಾಗೂ ಜಿಲ್ಲಾ ಅಭಿರಕ್ಷಕ ಎಂ. ಮೂರ್ತಿ, ಐಪಿಸಿ ಮತ್ತು ಬಿಎನ್ಎಸ್ ಮತ್ತು ಮಾನವ ಕಳ್ಳಸಾಗಾಣೆ ಅಡಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಕುರಿತು ಮಾಹಿತಿ ನೀಡಿದರು.
ಸೈಬರ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ಮಹಿಳೆಯರಿಗೆ ಸೈಬರ್ ಸುರಕ್ಷತೆಯ ಬಗ್ಗೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಎನ್.ಪವಿತ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಮಹಿಳೆಯರಿಗಾಗಿ ಇರುವ ಯೋಜನೆಗಳ ಬಗ್ಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಉಚಿತ ಸಹಾಯವಾಣಿ ಸಂಖ್ಯೆ 15100 ಯನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಸರಸ್ವತಿ ಕಾನೂನು ಕಾಲೇಜು ಪ್ರಾಂಶುಪಾಲೆ ಸುಧಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸೇರಿದಂತೆ ಮತ್ತಿರರು ಇದ್ದರು.




About The Author
Discover more from JANADHWANI NEWS
Subscribe to get the latest posts sent to your email.