ಹಿರಿಯೂರು:
ನಗರದ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆಯ ಕುರಿತು ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ತೀವ್ರ ಅಸಮಧಾನವನ್ನು ವ್ಯಕ್ತಪಡಿಸಿದರು.
ನಗರದ ಹೃದಯಭಾಗದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ , ನಿರ್ವಹಣೆ, ಸ್ವಚ್ಚತೆ, ಆರೋಗ್ಯ ಸೇವೆಗಳ ಕುರಿತು ಪರಿಶೀಲನೆ ನಡೆಸಿ ನಂತರ ಅವರು ಸುದ್ಧಿಗಾರರೊಂದಿಗೆ ಮಾತನಾಡಿದರು.

ರಾಜ್ಯಸರ್ಕಾರ ಬಡವರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಬದ್ಧವಾಗಿದೆ. ವೈದ್ಯರು ರೋಗಿಗಳನ್ನು ಪ್ರೀತಿ-ವಿಶ್ವಾಸ ಹಾಗೂ ಗೌರವದಿಂದ ಕಾಣಬೇಕು. ಗುಣಮಟ್ಟದ ಆರೋಗ್ಯ ಸೇವೆ ನೀಡುವುದು ವೈದ್ಯರ ಕರ್ತವ್ಯವಾಗಿದೆ. ಸಾರ್ವಜನಿಕರೂ ಕೂಡ ವೈದ್ಯರನ್ನು ಗೌರವದಿಂದ ಕಾಣಬೇಕು ಎಂದರಲ್ಲದೆ,
ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಶಿಥಿಲಗೊಂಡಿದೆ. ಛಾವಣಿ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಕೆ.ಆರ್.ಐ.ಡಿ.ಎಲ್. ಸಂಸ್ಥೆಯ ಅಧಿಕಾರಿಗಳಿಗೆ ಅವರು ತಾಕೀತು ಮಾಡಿದರು.
ನಗರದ ಹೊರವಲಯದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಶೀಘ್ರ ಲೋಕಾರ್ಪಣೆ ಮಾಡಲಾಗುವುದು. ಆಸ್ಪತ್ರೆ ಸಂಪರ್ಕ ರಸ್ತೆ, ಕಾಂಪೌಂಡ್, ಸಾರಿಗೆ-ಸಂಪರ್ಕ ವ್ಯವಸ್ಥೆ ಇತರ ಮೂಲ ಸೌಲಭ್ಯ ಕಲ್ಪಿಸಲು ವಿಶೇಷ ಅನುದಾನ ನೀಡಿದ್ದು, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂಬುದಾಗಿ ಅವರು ಹೇಳಿದರು.
ಅಗತ್ಯ ಮೂಲ ಸೌಕರ್ಯ, ದೂರದೃಷ್ಠಿ ಇಲ್ಲದೆ ನಗರದ ಹೊರವಲಯದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ವೈದ್ಯಕೀಯ ಯಂತ್ರೋಪಕರಣ ಅಳವಡಿಸಿಲ್ಲ. ಹಿರಿಯೂರು ಪಟ್ಟಣಕ್ಕೆ ಸಮೀಪದ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದ್ದರೆ ಜನರಿಗೆ ಅನುಕೂಲವಾಗುತ್ತಿತ್ತು ಎಂಬುದಾಗಿ ಸಚಿವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ವಿಜಯ್ ಕುಮಾರ್, ನಗರಸಭೆ ಪೌರಾಯುಕ್ತರಾದ ಎ.ವಾಸೀಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ಕೆ.ಪಿ.ಸಿ.ಸಿ.ಸದಸ್ಯರಾದ ಅಮೃತೇಶ್ವರ, ನಗರಸಭೆ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ, ನಗರಸಭೆಯ ಸದಸ್ಯರುಗಳಾದ ವಿಠ್ಠಲ, ಜಗದೀಶ್, ಶ್ರೀಮತಿ ಮಂಜುಳಾ, ಮುಖಂಡರಾದ ಜ್ಞಾನೇಶ್, ಕಬ್ಬಡಿರವಿ ಸೇರಿದಂತೆ ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.