
ಚಿತ್ರದುರ್ಗಜೂ.12:
ಆಯುಷ್ಮಾನ್ ಭಾರತ್- ಪ್ರಧಾನಮಂತ್ರಿ ಜನಾರೋಗ್ಯ, ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.
ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಈಚೆಗೆ ನಡೆದ ಚಿತ್ರದುರ್ಗ ತಾಲ್ಲೂಕು ಮಾಸಿಕ ಸಭೆಯಲ್ಲಿ ಆಯುಷ್ಮಾನ್ ಭಾರತ್ ಪೋಸ್ಟರ್ಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಬಿಪಿಎಲ್ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5 ಲಕ್ಷದವರೆಗೆ ನಗದು ರಹಿತ ಉಚಿತ ಚಿಕಿತ್ಸೆ ಲಭ್ಯವಿದೆ. ಎಪಿಎಲ್ ಕುಟುಂಬಕ್ಕೆ ಸಹ ಪಾವತಿ ಆಧಾರದ ಮೇಲೆ ಶೇ.30ರಷ್ಟು ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ವಾರ್ಷಿಕ ಮಿತಿ ಕುಟುಂಬಕ್ಕೆ ಗರಿಷ್ಠ ರೂಪಾಯಿ 1.5 ಲಕ್ಷಗಳ ಚಿಕಿತ್ಸೆ ಲಭ್ಯವಿದೆ. ದೀರ್ಘಾವಧಿ ಮತ್ತು ತೀವ್ರತರದ ಕಾಯಿಲೆಗಳಿಂದ ಬಳಲುವ ಕುಟುಂಬದವರಿಗೆ ಆರ್ಥಿಕ ಹೊರೆಯಾಗದಂತೆ ಈ ಯೋಜನೆ ರಕ್ಷಣೆ ನೀಡುತ್ತದೆ. ಎಲ್ಲಾ ಸರ್ಕಾರಿ ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿ ಕೊಳ್ಳುವಂತೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಸಾರ್ವಜನಿಕರು ಪ್ರಥಮವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು. ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಲಭ್ಯ ಇರದಿದ್ದಲ್ಲಿ ಮೇಲ್ದರ್ಜೆ ಆಸ್ಪತ್ರೆಗೆ ರೆಫರ್ ಮಾಡಲಾಗುವುದು. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ನೋಂದಾಯಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆ ಅಥವಾ ಉಚಿತ ಸಹಾಯವಾಣಿ ಸಂಖ್ಯೆ 14555 ಅಥವಾ 1800 425 8330 ಗೆ ಕರೆ ಮಾಡಿರಿ “ನಿಮ್ಮ ಆರೋಗ್ಯ ನಮ್ಮ ಆದ್ಯತೆ” ಎಂದರು.
ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಬೇಕಾದರೆ ವೈದ್ಯರು ಮತ್ತು ಸಿಬ್ಬಂದಿಯವರು ಶಾಲಾ- ಕಾಲೇಜುಗಳಲ್ಲಿ ಸಾರ್ವಜನಿಕ ವಲಯಗಳಲ್ಲಿ ಬಾಲ್ಯ ವಿವಾಹದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಬೇಕು. ಬಾಲ ಗರ್ಭಿಣಿಯರಾಗದಂತೆ ಕ್ರಮವಹಿಸಬೇಕು. ಆಸ್ಪತ್ರೆಗಳಲ್ಲಿ ಸಿಜೇರಿಯನ್ ಹೆರಿಗೆ ಆಗದಂತೆ ಸಾಮಾನ್ಯ ಹೆರಿಗೆ ಮಾಡಿಸಲು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾರ್ಯಕ್ರಮ ಅನುμÁ್ಠನಾಧಿಕಾರಿಗಳಾದ ಡಾ. ನಾಗರಾಜ್, ಟಿಹೆಚ್ಒ ಡಾ.ಬಿ.ವಿ.ಗಿರೀಶ್, ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ವಿವಿಧ ವೃಂದದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಭೆಯಲ್ಲಿ ಹಾಜರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.