January 29, 2026
IMG-20260112-WA0296.jpg

ಚಳ್ಳಕೆರೆ ತಾಲೂಕಿನ ಬೇಡರೆಡ್ಡಿ ಗ್ರಾಮದಲ್ಲಿ ಸಾರ್ವಜನಿಕರು ದಿನನಿತ್ಯ ಓಡಾಡುವ ಸಾರ್ವಜನಿಕ ರಸ್ತೆಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಲಿಖಿತವಾಗಿ ದೂರು ನೀಡಿದ್ದರೂ, ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಪಂಚಾಯಿತಿ ಆಡಳಿತದ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದೆ.ಗ್ರಾಮದ ಪ್ರಮುಖ ರಸ್ತೆಯೊಂದನ್ನು ಅಕ್ರಮವಾಗಿ ಮುಚ್ಚಿ ಕಟ್ಟಡ ನಿರ್ಮಿಸಲಾಗುತ್ತಿದ್ದು, ಇದರಿಂದ ಪಾದಚಾರಿಗಳು, ಶಾಲಾ ಮಕ್ಕಳು, ವೃದ್ಧರು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಜವಾಬ್ದಾರರಾಗಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿಕೊಂಡಿರುವಂತೆ ವರ್ತಿಸುತ್ತಿರುವುದು ಸಾರ್ವಜನಿಕರಲ್ಲಿ ಭಾರೀ ಅಸಮಾಧಾನಕ್ಕೆ ಕಾರಣವಾಗಿದೆ.
ಸ್ಥಳೀಯರ ಪ್ರಕಾರ, ಅಕ್ರಮ ಕಟ್ಟಡ ನಿರ್ಮಾಣ ಆರಂಭವಾಗಿದ್ದಾಗಲೇ ಪಂಚಾಯಿತಿಗೆ ದೂರು ನೀಡಲಾಗಿತ್ತು. ಆದರೂ ನೋಟಿಸ್, ತಾತ್ಕಾಲಿಕ ತಡೆ, ಅಥವಾ ಸ್ಥಳ ಪರಿಶೀಲನೆ ಎಂಬ ಯಾವುದೇ ಪ್ರಾಥಮಿಕ ಕ್ರಮವೂ ಕೈಗೊಳ್ಳಲಾಗಿಲ್ಲ. ಇದರಿಂದ ಅಕ್ರಮ ನಿರ್ಮಾಣಕ್ಕೆ ಪಂಚಾಯಿತಿಯ ಮೌನ ಬೆಂಬಲವಿದೆಯೇ? ಎಂಬ ಅನುಮಾನಗಳು ಉದ್ಭವಿಸುತ್ತಿವೆ.
ಸಾರ್ವಜನಿಕ ರಸ್ತೆಯಂತಹ ಸಾಮೂಹಿಕ ಆಸ್ತಿಯನ್ನು ಅಕ್ರಮವಾಗಿ ಆಕ್ರಮಿಸುವುದು ಕಾನೂನುಬಾಹಿರವಾಗಿದ್ದರೂ, ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಕ್ರಮಗಳು ಹೆಚ್ಚಾಗುತ್ತಿವೆ. ಇಂತಹ ಘಟನೆಗಳು ಮುಂದುವರಿದರೆ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಎಂಬುದೇ ಇಲ್ಲದಂತಾಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ತಾಲೂಕು ಪಂಚಾಯಿತಿ, ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಮೇಲಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ, ಅಕ್ರಮ ಕಟ್ಟಡ ತೆರವುಗೊಳಿಸುವುದರ ಜೊತೆಗೆ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಾರ್ವಜನಿಕರ ಪ್ರಶ್ನೆ ಒಂದೇ –
ದೂರು ನೀಡಿದರೂ ಕ್ರಮವಿಲ್ಲದಿದ್ದರೆ, ಗ್ರಾಮ ಪಂಚಾಯಿತಿ ಇದೆ ಯಾಕೆ?

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading