May 13, 2026
FB_IMG_1778673418350.jpg

ಹೊಳಲ್ಕೆರೆಮೇ13:
ಯುವಜನತೆ ತಂಬಾಕು ಚಟಕ್ಕೆ ಬಲಿಯಾಗುತ್ತಿರುವುದನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯ ರಕ್ಷಿಸುವ ನಿಟ್ಟಿನಲ್ಲಿ ಹೊಳಲ್ಕೆರೆ ತಾಲ್ಲೂಕಿನ ಗೌಡಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಮಂಗಳವಾರ ದಿಢೀರ್ ಕಾರ್ಯಾಚರಣೆ ನಡೆಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಪಿ.ರೇಣುಪ್ರಸಾದ್ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ಡಿ.ಎಂ.ಅಭಿನವ್ ಅವರ ಮಾರ್ಗದರ್ಶನ ಹಾಗೂ ಆದೇಶದನ್ವಯ ಈ ದಾಳಿ ನಡೆದಿದೆ. ಗ್ರಾಮದಲ್ಲಿ ತಂಬಾಕು ಉತ್ಪನ್ನಗಳ ಮಾರಾಟದ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡವು ಈ ಕ್ರಮ ಕೈಗೊಂಡಿದೆ.
ಕಾರ್ಯಾಚರಣೆಯ ವೇಳೆ ಅಧಿಕಾರಿಗಳ ತಂಡವು ವಿವಿಧ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕೋಟ್ಪಾ-2003 ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಿ, ಸ್ಥಳದಲ್ಲೇ ದಂಡ ವಸೂಲಿ ಮಾಡಲಾಯಿತು. ಅಲ್ಲದೆ, ಸೆಕ್ಷನ್ 4, 6ಎ ಮತ್ತು 6ಬಿ ಅಡಿಯಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕಾದ ಎಚ್ಚರಿಕೆ ಫಲಕಗಳನ್ನು ಹಾಕುವಂತೆ ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಯುವಕರು ಅತೀ ಹೆಚ್ಚಾಗಿ ತಂಬಾಕು ವ್ಯಸನಕ್ಕೆ ಬಲಿಯಾಗುತ್ತಿದ್ದು, ಸಮಾಜದಲ್ಲಿ ಅಕಾಲಿಕ ಮರಣಗಳ ಸಂಖ್ಯೆ ಏರುತ್ತಿದೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ ಮತ್ತು ಪಾನ್ ಮಸಾಲ ಜಗಿದು ಉಗಿಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಬಿ.ಎಂ. ಪ್ರಭುದೇವ, ಹೊಳಲ್ಕೆರೆ ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ್ ನಾಯ್ಕ್, ಸಮುದಾಯ ಆರೋಗ್ಯಾಧಿಕಾರಿ ಜ್ಞಾನೇಶ್, ಗೌಡಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಾದ ಜಯಮ್ಮ ಮತ್ತು ಅಂಬಿಕಾ ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading