ಬಳ್ಳಾರಿ,ಜೂ.13
ಬಳ್ಳಾರಿ ತಾಲ್ಲೂಕು ವ್ಯಾಪ್ತಿಯ ಆಲದಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಶನಿವಾರ ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.

ಆಲದಹಳ್ಳಿ ಗ್ರಾಮದ ಸರ್ವೆ ನಂಬರ್ 38/ಎ ರಲ್ಲಿ ಬರುವ ಒಟ್ಟು 3.28 ಎಕರೆ ವಿಸ್ತೀರ್ಣದ ಜಮೀನು ಸರ್ಕಾರಿ ಈಚಲವನ ಜಮೀನಾಗಿದೆ. ಈ ಜಾಗವನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಆದೇಶದನ್ವಯ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಮತ್ತು ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಅವರ ನೇತೃತ್ವದ ತಂಡವು ಸ್ಥಳಕ್ಕೆ ಧಾವಿಸಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದಿದೆ.
ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್ ಗೋಡೆಗಳು, ಬೇಲಿ ಹಾಗೂ ಇತರೆ ತಾತ್ಕಾಲಿಕ ರಚನೆಗಳನ್ನು ಜೆಸಿಬಿ ಯಂತ್ರಗಳ ಸಹಾಯದಿಂದ ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ. ಅಲ್ಲದೆ, ಸಾರ್ವಜನಿಕರ ಮಾಹಿತಿಗಾಗಿ ಅಲ್ಲಿ ಜಾಗೃತಿ ಫಲಕವನ್ನು ಅಳವಡಿಸಲಾಗಿದೆ.
ಸ್ಥಳದಲ್ಲಿದ್ದ ಅಧಿಕಾರಿಗಳು ಒತ್ತುವರಿ ತೆರವು ಪ್ರಕ್ರಿಯೆಯನ್ನು ಹತ್ತಿರದಿಂದ ಪರಿಶೀಲಿಸಿ, ಇಡೀ ಜಾಗವನ್ನು ಮತ್ತೆ ಸರ್ಕಾರದ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಸಾರ್ವಜನಿಕ ಆಸ್ತಿ ಮತ್ತು ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.
=====
About The Author
Discover more from JANADHWANI NEWS
Subscribe to get the latest posts sent to your email.