ನಾಯಕನಹಟ್ಟಿ: ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ನಾಯಕ ಸಮುದಾಯದ ಪ್ರಭಾವಿ ನಾಯಕರನ್ನು ತುಳಿಯುವ ಕೆಲಸ ನಡೆಯುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಟಿ. ಬಸಪ್ಪ ನಾಯಕ ಬೇಸರ ವ್ಯಕ್ತಪಡಿಸಿದರು.
ಭಾನುವಾರ ನಾಯಕನಹಟ್ಟಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಡಿ, ಸಿಬಿಐ ಹಾಗೂ ಐಟಿ ಸಂಸ್ಥೆಗಳನ್ನು ಬಳಸಿಕೊಂಡು ನಾಯಕ ಸಮುದಾಯದ ಪ್ರಭಾವಿ ನಾಯಕರನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಸಚಿವ ಸತೀಶ್ ಜಾರಕಿಹೊಳಿ, ಕೆ.ಎನ್. ರಾಜಣ್ಣ, ಬಿ. ನಾಗೇಂದ್ರ ಸೇರಿದಂತೆ ನಾಯಕ ಸಮುದಾಯದ ಹಲವು ಪ್ರಭಾವಿ ನಾಯಕರ ವಿರುದ್ಧ ವಿವಿಧ ತನಿಖಾ ಸಂಸ್ಥೆಗಳ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಮುದಾಯದ ನಾಯಕರನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಪ್ರಯತ್ನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ನಾಯಕ ಸಮುದಾಯದ ನಾಯಕರಿಗೆ ರಾಜಕೀಯವಾಗಿ ಅನ್ಯಾಯವಾಗದಂತೆ ಎಲ್ಲರೂ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದು ಟಿ. ಬಸಪ್ಪ ನಾಯಕ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಿ.ಎಂ. ಮನೋಹರ, ಜಾಗನೂರಹಟ್ಟಿ ಈಶ್ವರಪ್ಪ, ಪಟ್ಟಣ ಪಂಚಾಯಿತಿ ಸದಸ್ಯ ಅಬಕಾರಿ ತಿಪ್ಪೇಸ್ವಾಮಿ, ಗುಂತುಕೊಲಮ್ಮನಹಳ್ಳಿ ಬಿ. ಚಂದ್ರಣ್ಣ, ಪುಟ್ಟಣ್ಣ, ಜಿ.ಎಂ. ಜಯಣ್ಣ, ಕಾರ್ತಿಕನಹಟ್ಟಿ ಬೋರಜ್ಜ, ಮಾಜಿ ಗ್ರಾ.ಪಂ. ಸದಸ್ಯ ಪಿ. ತಿಪ್ಪೇಸ್ವಾಮಿ, ಜ್ಞಾನೇಶ್ವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.