
ಹಿರಿಯೂರು :
ನಮ್ಮ ಭಾರತ ದೇಶವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡುಗಡೆಗೊಳಿಸಲು ಹಲವಾರು ರಾಷ್ಟ್ರನಾಯಕರು ಒಗ್ಗಟ್ಟಾಗಿ ಸೇರಿ ಹೋರಾಡಿದ್ದು, ಇಂತಹ ಮಹಾನ್ ನಾಯಕರುಗಳ ಪರಿಚಯ ಮಕ್ಕಳಿಗೆ ಆಗಬೇಕೆಂಬ ಉದ್ದೇಶದಿಂದ ನಮ್ಮ ಶಾಲೆಯಲ್ಲಿ ಸ್ವತಂತ್ರ್ಯ ದಿನಾಚರಣೆಯ ಮುನ್ನಾ ದಿನ ಸ್ವಾತಂತ್ರ್ಯ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದ್ದ ಸ್ವತಂತ್ರ್ಯ ದಿನಾಚರಣೆ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಚಿಕ್ಕಮಕ್ಕಳಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ರಾಷ್ಟ್ರೀಯ ಹಬ್ಬಗಳ ಆಚರಣೆ ಹಾಗೂ ಅವುಗಳ ಹಿಂದಿರುವ ಮಹತ್ವದ ಬಗ್ಗೆ ತಿಳಿಸುವುದರಿಂದ ಅವರಲ್ಲಿ ಬಾಲ್ಯದಿಂದಲೇ ದೇಶಾಭಿಮಾನ ಹಾಗೂ ದೇಶಭಕ್ತಿ ಬೆಳೆಸುವ ಮೂಲಕ ದೇಶದ ಉತ್ತಮ ಪ್ರಜೆಯಾಗಿ ರೂಪಿಸಬಹುದಾಗಿದೆ ಎಂದರಲ್ಲದೆ,
ಇಂದಿನ ಆಧುನಿಕ ಜಗತ್ತಿನಲ್ಲಿ ಮಕ್ಕಳಲ್ಲಿ ದೇಶದ ಬಗ್ಗೆ ಅಭಿಮಾನ ಪ್ರೀತಿ ಹಾಗೂ ಗೌರವ ಮನೋಭಾವ ಬೆಳೆಸುವುದರ ಜೊತೆಗೆ ಸಂಸ್ಕಾರ, ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ರೂಪಿಸುವುದು ಸಹ ಇಂದಿನ ಬಹುಮುಖ್ಯವಾದ ಅಗತ್ಯತೆಯಾಗಿದೆ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಕೋ-ಆರ್ಡಿನೇಟರ್ ಗಳಾದ ಶ್ರೀಮತಿ ನಂದಿನಿ, ಶ್ರೀಮತಿ ರಚನಾ, ಶಿಕ್ಷಕ-ಶಿಕ್ಷಕಿಯರುಗಳಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಮಮತಾ, ಶಿವರಾಜ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.