ಚಿತ್ರದುರ್ಗಡಿ.15:
ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿ, ನಲ್ಲಿಕಟ್ಟೆ ಮತ್ತು ಬಳ್ಳೇಕಟ್ಟೆ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ರವಿಕುಮಾರ್ ಘೋಷಿಸಿದರು.
ಚಿತ್ರದುರ್ಗ ತಾಲ್ಲೂಕು ಕಾರ್ಯನಿರ್ವಾಹಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರು, ಸಮಾಜ ಕಾರ್ಯಕರ್ತರು, ಗ್ರಾಮದ ಮಹಿಳೆಯರು ಎಲ್ಲರೂ ಒಗ್ಗೂಡಿ ಭೀಮಸಮುದ್ರ ಗ್ರಾಮ ಪಂಚಾಯಿತಿಯ ಮಳಲಿ, ನಲ್ಲಿಕಟ್ಟೆ, ಬಳ್ಳೇಕಟ್ಟೆ ಗ್ರಾಮಗಳನ್ನು ಈಚೆಗೆ ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸಿದ ಅವರು, ಇದೇ ರೀತಿಯಾಗಿ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಸಮಿತಿ ರಚಿಸಿ, ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಿ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳೆಂದು ಘೋಷಿಸುವಂತೆ ತಿಳಿಸಿದರು.
ತಂಬಾಕು ಮುಕ್ತ ಗ್ರಾಮಗಳನ್ನಾಗಿ ಮಾಡಲು ಮಳಲಿ, ನಲ್ಲಿಕಟ್ಟೆ ಮತ್ತು ಬಳ್ಳೇಕಟ್ಟೆ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಈ ಗ್ರಾಮಗಳಲ್ಲಿ ಗ್ರಾಮ ಮಟ್ಟದ ತಂಬಾಕು ನಿಯಂತ್ರಣ ಸಮಿತಿ, ಜಾಗೃತಿ ಕಾರ್ಯಕ್ರಮಗಳು, ಗ್ರಾಮ ಸಭೆಗಳು, ಐಇಸಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಿಲ್ಲಾ ಸಲಹೆಗಾರರು ಕೋಟ್ಪಾ-2003ರ ಕಾಯ್ದೆಯ ಕುರಿತು, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತಂತೆ ಮತ್ತು ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ದೊರೆಯುವಂತಹ ಉಚಿತ ಸೌಲಭ್ಯಗಳ ಬಗ್ಗೆ ಹಾಗೂ ಯುವಕರಿಗೆ ಮತ್ತು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ ಯುವಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸಿ ಜಾಗೃತಿ ಮೂಡಿಸಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿಯನ್ನು ಮೂಡಿಸಲಾಯಿತು ಮತ್ತು ಪ್ರತಿ ಗ್ರಾಮಗಳಲ್ಲಿನ ಯುವಕರು ತಮ್ಮ-ತಮ್ಮ ಮನೆಗಳನ್ನು ತಂಬಾಕು ಮುಕ್ತ ಮಾಡಿದಲ್ಲಿ, ನಂತರ ಗ್ರಾಮಗಳನ್ನು ತಂಬಾಕು ಮುಕ್ತ ಮಾಡಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿ.ವಿಶ್ವ, ಭೀಮಸಮುದ್ರ ಗ್ರಾ.ಪಂ ಅಧ್ಯಕ್ಷೆ ಸಿ.ಬಿ.ಪಾಲಾಕ್ಷಮ್ಮ, ಉಪಾಧ್ಯಕ್ಷ ಉಮೇಶ್, ಸದಸ್ಯರಾದ ರಮೇಶ್, ಸಾಕಮ್ಮ, ದೇವೇಂದ್ರ ನಾಯಕ, ಪ್ರಕಾಶ್, ಸಿದ್ದಗಂಗಮ್ಮ, ಪಿಡಿಒ ಹನ್ಸೀರಾ ಬಾನು, ಮಳಲಿ ಗ್ರಾಮ ಪಂಚಾಯಿತಿ ಸದಸ್ಯ ರಾಘವೇಂದ್ರ, ಬಳ್ಳೇಕಟ್ಟೆ ಗ್ರಾಮ ಪಂಚಾಯಿತಿ ಸದಸ್ಯೆ ದ್ರಾಕ್ಷಾಯಣಮ್ಮ, ನಲ್ಲಿಕಟ್ಟೆ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.