January 30, 2026
FB_IMG_1737029497278.jpg


ಚಿತ್ರದುರ್ಗಜ.16:
ಇದೇ ಜ.19 ಮತ್ತು 25 ರಂದು ಕೆಪಿಎಸ್‍ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಕೆಪಿಎಸ್‍ಸಿ ಹೊರಡಿಸಿರುವ ಪರೀಕ್ಷಾ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಈ ಕುರಿತು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರೀಕ್ಷಾ ಅಕ್ರಮಗಳನ್ನು ತಡೆಯುವ ದೃಷ್ಠಿಯಿಂದ ಕೆಪಿಎಸ್‍ಸಿ ಅಭ್ಯರ್ಥಿಗಳು ಪಾಲಿಸಬೇಕಾದ ಪರೀಕ್ಷಾ ಮಾರ್ಗಸೂಚಿಗಳನ್ನು ರೂಪಿಸಿದೆ. ಆನ್‍ಲೈನ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳುವ ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳು ಈ ಸೂಚನೆಗಳು ಓದಿ ಪಾಲಿಸಬೇಕು. ಅಭ್ಯರ್ಥಿಗಳು ಡೌನ್ ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನು ಹಾಗೂ ಅಭ್ಯರ್ಥಿಯ ಭಾವಚಿತ್ರವಿರುವ ಚುನಾವಣಾ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪ್ಯಾನ್ ಕಾರ್ಡ್, ಪಾಸ್‍ಪೋರ್ಟ್, ಸರ್ಕಾರಿ ನೌಕರರ ಮೂಲ ಗುರುತಿನ ಚೀಟಿ ಪರಿಶೀಲನೆ ನಂತರವೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದು. ಮೂಲ ಗುರುತಿನ ಚೀಟಿ ಹಾಜರುಪಡಿಸದ ಅಭ್ಯರ್ಥಿಗಳಿಗೆ ಪರೀಕ್ಷಾ ಉಪಕೇಂದ್ರವನ್ನು ಪ್ರವೇಶಿಸಲು ಅನುಮತಿ ನೀಡುವುದಿಲ್ಲ. ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಕ್ಯಾಲ್ಕುಲೇಟರ್, ವೈಟ್ ಫ್ಲೂಯಿಡ್, ವೈರ್‍ಲೆಸ್ ಸೆಟ್ಸ್, ಪೇಪರ್, ಬುಕ್‍ಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.
ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್ ಧರಿಸುವಂತಿಲ್ಲ. ಮಂಗಳ ಸೂತ್ರ ಮತ್ತು ಕಾಲುಂಗುರವನ್ನು ಹೊರತುಪಡಿಸಿ ಯಾವುದೇ ಇತರೆ ಆಭರಣಗಳು ಪುಲ್‍ವೋವರ್ಸ್, ಜಾಕೆಟ್ ಮತ್ತು ಸ್ವೆಟರ್ ಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ. ಮೆಟಲ್ ವಾಟರ್ ಬಾಟೆಲ್ ಅಥವಾ ನಾನ್ ಟ್ರಾನ್ಸ್‍ಪರೆಂಟ್ ವಾಟರ್ ಬಾಟಲ್ ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ .
ಆಧುನಿಕ ತಂತ್ರಜ್ಞಾನದ ಬಳಸಿ ಪರೀಕ್ಷಾ ಅಕ್ರಮ ಎಸಗುವುದನ್ನು ತಡೆಯುವ ನಿಟ್ಟಿನಲ್ಲಿ ಮೆಟಲ್ ಡಿಟೆಕ್ಟರ್ ಹಾಗೂ ಎಲ್‍ಇಡಿ ಬ್ಯಾಟರಿ ಬಳಸಿ ಅಭ್ಯರ್ಥಿಗಳನ್ನು ತಪಾಸಣೆ ನಡೆಸಲಾಗುವುದು. ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳಿಂದ ಫ್ರಿಸ್ಕಿಂಗ್ ಕಾರ್ಯವನ್ನು ನೆರವೇರಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 02 ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಎಚ್ಚರಿಕೆಯಿಂದ ಪರೀಕ್ಷಾ ಕಾರ್ಯ ನಿರ್ವಹಿಸಲು ನಿರ್ದೇಶನ: ಸ್ಪರ್ಧಾತ್ಮಕ ಪರೀಕ್ಷೆ ನಿರ್ವಹಣೆ ಕಾರ್ಯ ಅತಿ ಸೂಕ್ಷ್ಮವಾದದ್ದು, ಅಭ್ಯರ್ಥಿಗಳ ಭವಿಷ್ಯ ಇದರಲ್ಲಿ ಅಡಗಿದೆ. ಅಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆಯಿಂದ, ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಬಂಡಲ್‍ಗಳನ್ನು ಕೊಂಡೊಯ್ಯಲು ನೇಮಿಸಿರುವ ಮಾರ್ಗಾಧಿಕಾರಿಗಳು ಸರಿಯಾದ ಸಮಯಕ್ಕೆ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು, ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಒಎಂಆರ್ ಬಂಡಲ್‍ಗಳನ್ನು ಅಂಚೆ ಮೂಲಕ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಿಕೊಡಬೇಕು. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಬಳಿ ಇರುವ ಅಂಚೆ ಕಚೇರಿಗಳು ಒಎಂಆರ್ ಬಂಡಲ್‍ಗಳು ತಲುಪುವವರೆಗೂ ತಪ್ಪದೇ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಿರ್ದೇಶನ ನೀಡಿದರು.
ಜಾಮರ್ ಅಳವಡಿಕೆ: ಮೊಬೈಲ್ ಬ್ಲೂಟೂತ್ ಮತ್ತು ಇತರೆ ಆಧುನಿಕ ಸಂವಹನ ಉಪಕರಣಗಳನ್ನು ಬಳಸಿ ಪರೀಕ್ಷೆಯಲ್ಲಿ ಅಕ್ರಮಗಳನ್ನು ಎಸಗುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಮಾಡಲಾಗುವುದು. ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಇದರೊಂದಿಗೆ ಫೇಸ್ ರೆಕಗ್ನೈಸೇಷನ್ ಹಾಗೂ ಬಯೋಮೆಟ್ರಿಕ್ ಹಾಜರಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕವಾದ ಸಿಬ್ಬಂದಿ ಕೈಗೊಳ್ಳುವರು. ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ: ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ದೃಷ್ಠಿಯಿಂದ ಜ.19 ಹಾಗೂ 25 ರಂದು ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಸೆಕ್ಷನ್ 114 ವಿಧಿಸಿ ನಿಷೇಧಾಜ್ಞೆ ಜಾರಿ ಮಾಡಿ, ಆದೇಶ ಹೊರಡಿಸಲಾಗುವುದು. ಪರೀಕ್ಷಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಜೆರಾಕ್ಸ್, ಕಂಪ್ಯೂಟರ್ ಹಾಗೂ ಇಂಟರ್‍ನೆಟ್ ಸೆಂಟರ್‍ಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪಶ್ನೆ ಪತ್ರಿಕೆ ಹಾಗೂ ಒಎಂಆರ್ ಗಳನ್ನು ಕೊಂಡೊಯ್ಯಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಹೆಲ್ತ್ ಸ್ಕ್ರೀನಿಂಗ್ ಕೌಂಟರ್ ಸ್ಥಾಪಿಸುವಂತೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
21 ಪರೀಕ್ಷಾ ಕೇಂದ್ರ 7783 ಅಭ್ಯರ್ಥಿಗಳು: ಜ.19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 11:30 ರವರೆಗೆ ಪತ್ರಿಕೆ-01 ಹಾಗೂ ಜ.25 ರಂದು ಮಧ್ಯಾಹ್ನ 03 ರಿಂದ ಸಂಜೆ 05 ರವರೆಗೆ ಪತ್ರಿಕೆ-02 ರ ಪರೀಕ್ಷೆ ನಡೆಯಲಿದೆ. ನಗರದಲ್ಲಿ 21 ಪರೀಕ್ಷಾ ಕೇಂದ್ರಗಳು ಇದ್ದು, ಒಟ್ಟು 7783 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಕಲಚೇತನ ಅಭ್ಯರ್ಥಿಗಳ ಸಹಾಯಕ್ಕಾಗಿ ಪರೀಕ್ಷಾ ಕೇಂದ್ರದಲ್ಲಿ ವ್ಹೀಲ್ ಚೇರ್ ವ್ಯವಸ್ಥೆ ಕಲ್ಪಿಸಲಾಗುವುದು. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರಿಗೆ ತರಬೇತಿ ನೀಡಲಾಗಿದೆ. ಜಿಲ್ಲಾ ವೀಕ್ಷಕರು, 4 ಕೇಂದ್ರಗಳಿಗೆ ಓರ್ವ ವೀಕ್ಷಕರು, ಪ್ರತಿ ಪರೀಕ್ಷ ಕೇಂದ್ರಗಳಿಗೆ ಓರ್ವ ಸ್ಥಳೀಯ ನಿರೀಕ್ಷಣಾಧಿಕಾರಿ, ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಖಜಾನಾಧಿಕಾರಿ ರಮೇಶ್ ಅರೆ ಮಲ್ಲಾಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading