ಹೊಸದುರ್ಗ ಫೆ.16.ಜೀತ ಪದ್ದತಿ ನಿರ್ಮೂಲನ ದಿನಾಚರಣೆ: ಕಾನೂನು ಅರಿವು ಕಾರ್ಯಕ್ರಮ
Bonded Labour System (Abolition) Act, 1976 ರ ಅನ್ವಯ ಕಾರ್ಮಿಕರನ್ನು ಜೀತಕ್ಕೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜೆಎಂಎಫ್ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರಸನ್ನ ಕುಮಾರ್ ಹೇಳಿದರು.
ಪಟ್ಟಣದ ಜ್ಯೂನಿಯರ್ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಜೀತ ಪದ್ದತಿ ನಿರ್ಮೂಲನ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸಂವಿಧಾನವು ನಾಗರೀಕರಿಗೆ ಗೌರವಯುತ ಜೀವನ ನಡೆಸಲು ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದೆ. ಮಾನವನ ಗೌರವಯುತ ಬದುಕಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜೀತ ಪದ್ದತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ವಿದ್ಯಾರ್ಥಿಗಳು ಮತ್ತು ಯುವ ಸಮುದಾಯದಲ್ಲಿ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ತಹಸೀಲ್ದಾರ್ ತಿರುಪತಿ ಪಾಟೀಲ್ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದು ಕಾನೂನುಬಾಹಿರ. ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಶಿಕ್ಷಣದ ಮೂಲಕವೇ ಇಂತಹ ಅನಿಷ್ಠ ಪದ್ದತಿಗಳನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಬಿಇಓ ಸೈಯದ್ ಮೋಸಿನ್, ವಕೀಲರ ಸಂಘದ ಅಧ್ಯಕ್ಷ ಬೊಮ್ಮಣ್ಣ, ಕಾರ್ಯದರ್ಶಿ ಈರಬಸಪ್ಪ, ವಕೀಲರಾದ ಮೈಲಾರಪ್ಪ ಹಾಗೂ ಜ್ಯೋತಿ, ಪ್ರಾಂಶುಪಾಲ ನಾಗೇಂದ್ರಪ್ಪ, ಇಸಿಓ ಶಶಿಧರ್, ಟಿಪಿಇಓ ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚಿತ್ರಮಾಹಿತಿ: ಹೊಸದುರ್ಗ ಪಟ್ಟಣದ ಜ್ಯೂನಿಯರ್ ಕಾಲೇಜು ಪ್ರೌಢಶಾಲಾ ಆವರಣದಲ್ಲಿ ಜೀತ ಪದ್ದತಿ ನಿರ್ಮೂಲನ ದಿನಾಚರಣೆಯ ಅಂಗವಾಗಿ ನಡೆದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ಪ್ರಸನ್ನ ಕುಮಾರ್ ಉದ್ಘಾಟಿಸಿದರು.
About The Author
Discover more from JANADHWANI NEWS
Subscribe to get the latest posts sent to your email.