February 17, 2026
FB_IMG_1771327331334.jpg

ಚಿತ್ರದುರ್ಗ ಫೆ.17:
ಪೊಲೀಸ್ ಠಾಣೆಗಳು ಕೇವಲ ಬಣ್ಣದ ಪೇಂಟಿಂಗ್, ಬ್ಯಾನರ್‍ಗಳಿಂದ ಮಕ್ಕಳ ಸ್ನೇಹಿಯಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಸಂಕಷ್ಟದಲ್ಲಿರುವ ಮಕ್ಕಳನ್ನು ಕಂಡಾಗ ತಮ್ಮದೇ ಮಗು ಎಂಬ ಭಾವನೆಯಿಂದ ಸ್ಪಂದಿಸಿದಾಗ ಮಾತ್ರ ವ್ಯವಸ್ಥೆ ಸುಧಾರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಕೆ.ಟಿ. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಜಿಲ್ಲೆಯ ಎಸ್‍ಜೆಪಿಯು ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಜೆ.ಜೆ.ಕಾಯ್ದೆ ಹಾಗೂ ಮಿಷನ್ ವಾತ್ಸಲ್ಯ ಯೋಜನೆಗಳ ಕುರಿತು ಏರ್ಪಡಿಸಿದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪೊಲೀಸ್ ಇಲಾಖೆಯಲ್ಲಿ ಸಮವಸ್ತ್ರ ಮತ್ತು ದಂಡ ಅಧಿಕಾರ ಸೂಚಿಸುತ್ತವೆ. ಆದರೆ, ಮಗುವಿನ ಪ್ರಕರಣಗಳನ್ನು ನಿರ್ವಹಿಸುವಾಗ ಅಧಿಕಾರಕ್ಕಿಂತ ಹೆಚ್ಚಾಗಿ ಸಂವೇದನಾಶೀಲತೆ ಮತ್ತು ಮಾನವೀಯತೆ ಮುಖ್ಯವಾಗುತ್ತದೆ ಎಂದು ತಿಳಿಸಿದ ಅವರು, ಠಾಣೆಗೆ ಬರುವ ಮಕ್ಕಳೊಂದಿಗೆ ಅಧಿಕಾರಿಗಳು ಹೇಗೆ ವರ್ತಿಸುತ್ತಾರೆ ಮತ್ತು ಅವರ ಮನೋಭಾವ ಹೇಗಿರುತ್ತದೆ ಎಂಬುದು ನ್ಯಾಯ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಒಂದು ಸಣ್ಣ ಸಸಿಗೆ ನೀರು, ಗೊಬ್ಬರ ಮತ್ತು ಬೇಲಿ ಹಾಕಿ ರಕ್ಷಿಸಿದರೆ ಅದು ಹೇಗೆ ಭವಿಷ್ಯದಲ್ಲಿ ಹೆಮ್ಮರವಾಗಿ ಬೆಳೆಯುತ್ತದೆಯೋ, ಹಾಗೆಯೇ ಮಕ್ಕಳ ರಕ್ಷಣೆಯಲ್ಲಿ ವಿವಿಧ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಬೇಕು. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಮನ್ವಯತೆಯಿಂದ ಕೆಲಸ ಮಾಡಿದರೆ ಮಾತ್ರ ಮಕ್ಕಳ ಹಕ್ಕುಗಳನ್ನು ಕಾಪಾಡಲು ಸಾಧ್ಯ ಎಂದು ಅವರು ತಿಳಿಸಿದರು.

ಸಂವಿಧಾನದ ಯಶಸ್ಸು ಅದನ್ನು ಅನುಷ್ಠಾಗೊಳಿಸುವವರ ಯೋಗ್ಯತೆಯ ಮೇಲೆ ಅವಲಂಬಿತವಾಗಿರುತ್ತದೆ ಎಂಬ ಅಂಬೇಡ್ಕರ್ ಅವರ ನುಡಿಯಂತೆ, ಮಕ್ಕಳ ನ್ಯಾಯ ಕಾಯ್ದೆ-2015 ಪರಿಣಾಮಕಾರಿಯಾಗಿ ಜಾರಿಗೆ ಬರಲು ಅಧಿಕಾರಿಗಳಲ್ಲಿ ಮಾನವೀಯತೆ ಇರಬೇಕು. ಕೇವಲ ಯಾಂತ್ರಿಕವಾಗಿ ಕರ್ತವ್ಯ ನಿರ್ವಹಿಸದೆ, ಮಕ್ಕಳ ವಿಷಯದಲ್ಲಿ ಸಂವೇದನಾಶೀಲರಾಗಿ ವರ್ತಿಸುವುದು ಅತ್ಯಗತ್ಯ ಎಂದರು.
“ತೆರೆದ ಮನೆ” ಕಾರ್ಯಕ್ರಮದ ಪ್ರಭಾವದಿಂದಾಗಿ, ಬಾಲ್ಯ ವಿವಾಹದಂತಹ ಸಂಕಷ್ಟಕ್ಕೆ ಸಿಲುಕಿದ ಮಗುವೊಂದು ಧೈರ್ಯವಾಗಿ ಬಂದು ದೂರು ನೀಡಿ ತನ್ನ ಮದುವೆ ತಡೆದ ಘಟನೆ ಸ್ಮರಿಸಿದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ, ಪೊಲೀಸ್ ಇಲಾಖೆಯು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸುವ ಮೂಲಕ ಪ್ರತಿಯೊಂದು ಮಗುವಿಗೂ ನ್ಯಾಯ ಒದಗಿಸುವ ಬದ್ಧತೆ ಬೆಳೆಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್. ವಿಜಯ ಕುಮಾರ್ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸುಮಾರು 3,800ಕ್ಕೂ ಹೆಚ್ಚು ಬಾಲಗರ್ಭಿಣಿ ಪ್ರಕರಣಗಳು ವರದಿಯಾಗಿರುವುದು ಗಂಭೀರವಾದ ವಿಚಾರವಾಗಿದೆ. ಆದರೆ, ಇದರಲ್ಲಿ ಕೇವಲ ಶೇ.1 ರಿಂದ 2 ರಷ್ಟು ಪ್ರಕರಣಗಳಲ್ಲಿ ಮಾತ್ರ ಎಫ್‍ಐಆರ್ ದಾಖಲಾಗುತ್ತಿರುವುದು ಮತ್ತು ಶೇ. 10 ರಷ್ಟು ಪ್ರಕರಣಗಳು ಮಾತ್ರ ಇಲಾಖೆಯ ಗಮನಕ್ಕೆ ಬರುತ್ತಿರುವುದು ಕಳವಳಕಾರಿಯಾಗಿದೆ ಎಂದರು.
ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಒಂದು ವಿಶಿಷ್ಟ ಹೆಜ್ಜೆ ಇಟ್ಟಿದೆ. ಜಿಲ್ಲೆಯಾದ್ಯಂತ 18 ವರ್ಷದೊಳಗಿನ ಸುಮಾರು 54,000 ಹೆಣ್ಣುಮಕ್ಕಳ ಸಮೀಕ್ಷೆ ನಡೆಸಲಾಗಿದ್ದು, ಪ್ರತಿಯೊಬ್ಬ ಪೋಷಕರಿಂದ “ನನ್ನ ಮಗಳಿಗೆ 18 ವರ್ಷ ತುಂಬುವವರೆಗೆ ಮದುವೆ ಮಾಡುವುದಿಲ್ಲ” ಎಂದು ಲಿಖಿತವಾಗಿ ಮುಚ್ಚಳಿಕೆ ಪತ್ರಕ್ಕೆ ಸಹಿ ಪಡೆಯಲಾಗುತ್ತಿದೆ. ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಪ್ರತಿ ಹಳ್ಳಿಯಲ್ಲೂ ಜಾಗೃತಿ ಮೂಡಿಸಲಾಗುತ್ತಿದೆ. ಒಂದು ವೇಳೆ ಕಾನೂನು ಮೀರಿ ಮದುವೆ ಮಾಡಿದರೆ ಅಂತಹ ಪೋಷಕರು ಮತ್ತು ಮದುವೆಗೆ ಸಹಕರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಪಿಡಿಒಗಳು ಮತ್ತು ಶಿಕ್ಷಕರು ಈ ಬಗ್ಗೆ ಸದಾ ಜಾಗರೂಕರಾಗಿರಬೇಕು. ಯಾವುದೇ ಬಾಲ್ಯ ವಿವಾಹದ ಸುಳಿವು ಸಿಕ್ಕರೂ ತಕ್ಷಣ ಇಲಾಖೆಗೆ ಅಥವಾ ಸಹಾಯವಾಣಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಲ್ಲಿ ಮೂಡಿಸಲಾಗುತ್ತಿರುವ ಜಾಗೃತಿಯ ಫಲವಾಗಿ ಈಗ ಬಾಲ್ಯ ವಿವಾಹದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ವಿಶೇಷವೆಂದರೆ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಯ ಬಗ್ಗೆ ಹೆಣ್ಣುಮಕ್ಕಳೇ ಧೈರ್ಯ ತೋರುತ್ತಿದ್ದಾರೆ. ಮೊಳಕಾಲ್ಮೂರು ಮತ್ತು ಚಳ್ಳಕೆರೆ ಭಾಗಗಳಲ್ಲಿ ತಮಗೆ ಇಷ್ಟವಿಲ್ಲದಿದ್ದರೂ ಮದುವೆ ಮಾಡಲಾಗುತ್ತಿದೆ ಎಂದು ಹೆಣ್ಣುಮಕ್ಕಳು ಸ್ವತಃ ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದು ಬದಲಾವಣೆಯ ಸಂಕೇತವಾಗಿದೆ ಎಂದರು.
ಬಾಲ್ಯ ವಿವಾಹದ ವಿಷಯದಲ್ಲಿ ಪೊಲೀಸರು ಯಾವುದೇ ದೂರಿಗಾಗಿ ಕಾಯಬೇಕಿಲ್ಲ. ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮದುವೆ ನಡೆಯುತ್ತಿರುವ ಬಗ್ಗೆ ಮಾಹಿತಿ ಸಿಕ್ಕರೆ, ಸುಮೋಟೋ ಪ್ರಕರಣ ದಾಖಲಿಸಿ ತಕ್ಷಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಾಲ್ಯ ವಿವಾಹ ತಡೆಯಲು ಕೇವಲ ಹುಡುಗನ ಮೇಲೆ ಕೇಸ್ ಹಾಕಿದರೆ ಸಾಲದು, ಮದುವೆಗೆ ಪ್ರೇರೇಪಿಸುವ ಪೋಷಕರ ಮೇಲೂ ಪೋಕ್ಸೋ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಉಪವಿಭಾಗ ಪೊಲೀಸ್ ಉಪಾಧೀಕ್ಷಕರು ಹಾಗೂ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಅರುಣ್ ನಾಗೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗಂಗಪ್ಪ, ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ಪ್ರೇಮಮೂರ್ತಿ, ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಡಾ.ಕೆ.ರಾಘವೇಂದ್ರ ಭಟ್ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

==========

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading