June 17, 2026
FB_IMG_1781704861328

ಹಿರಿಯೂರು:
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೆಹರೂ ಮೈದಾನದಲ್ಲಿ ಅಪಾಯ ಸ್ಥಿತಿಯಲ್ಲಿರುವ ಕಟ್ಟಡ ತೆರವುಗೊಳಿಸಬೇಕು, ಶಾಲಾ ಕಟ್ಟಡಗಳ ದುರಸ್ತಿ ಸುರಕ್ಷತೆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬುದಾಗಿ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್ ಪಂಚಾಯತ್ ರಾಜ್ ಇಂಜಿನಿಯರ್ ಅವರಿಗೆ ಸೂಚನೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಶಾಲೆಗಳು ಪ್ರಾರಂಭವಾಗಿದ್ದು, ಶಾಲಾ ನಿರ್ವಹಣೆಯ ಪೂರ್ವ ತಯಾರಿ ಕುರಿತು ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ತಾಲ್ಲೂಕು ಅಭಿವೃದ್ಧಿ ಕುರಿತು ಅನೇಕ ಸಲಹೆ ಸೂಚನೆಗಳನ್ನು ನೀಡಿದರು.
ಮಕ್ಕಳ ಹಾಜರಾತಿ ಮತ್ತು ಫಲಿತಾಂಶ ಉನ್ನತಿಗಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು ಶಾಲೆಗಳಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಜಾಗೃತಿ ಮೂಡಿಸಲು ಪೊಲೀಸ್ ಉಪ ಅಧೀಕ್ಷಕರಿಗೆ ಸೂಚಿಸಿದರು.
ಹಿರಿಯೂರು ತಾಲೂಕಿನಲ್ಲಿ ಬಡ ವಿದ್ಯಾರ್ಥಿಗಳು ಹಾಸ್ಟೆಲ್ ವಂಚಿತವಾಗದಂತೆ ಕ್ರಮ ವಹಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಜೆ. ಜಿ. ಹಳ್ಳಿ ದಿಂಡಾವರ, ಕರಿಯಲ ಓಣಿಹಟ್ಟಿ, ಕಿಲಾರದಹಳ್ಳಿ, ಪಿಲಾಲಿ ತಾಂಡ, ಐಮಂಗಲ ಹೋಬಳಿ ಗೌನಹಳ್ಳಿ, ಗೂಗುದ್ದು, ಬೀರೇನಹಳ್ಳಿ ಮುಂತಾದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥ ಪಡಿಸಲು ಗ್ರಾಮೀಣ ಕುಡಿಯುವ ನೀರು ಇಂಜಿನಿಯರ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಲ್ವಳ್ಳಿ ಭಾಗದ ಅನೇಕ ರೈತರು ಕಲ್ವಳ್ಳಿ ಭಾಗಕ್ಕೆ ವಿವಿಸಾಗರ ನೀರು ಹರಿಸುವ ಕಡತ ಮಾನ್ಯ ಮುಖ್ಯಮಂತ್ರಿಗಳ ಬಳಿ ಇದ್ದು ಮುಂಬರುವ ಸಚಿವ ಸಂಪುಟಗಳಲ್ಲಿ ಅದನ್ನು ಮಂಜೂರು ಮಾಡುವಂತೆ ಒತ್ತಾಯ ಮಾಡಲು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರ ನಿಧನಕ್ಕೆ 2 ನಿಮಿಷಗಳ ಮೌನಾಚರಣೆ ಮಾಡಲಾಯಿತು.
ಈ ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಟಿ.ಕೃಷ್ಣಮೂರ್ತಿ, ಜಿಲ್ಲಾ ಗ್ಯಾರಂಟಿ ಉಪಾಧ್ಯಕ್ಷರಾದ ಖಾದಿರಮೇಶ್, ತಹಸೀಲ್ದಾರ್ ಎಂ.ಸಿದ್ದೇಶ್, ತಾಲೂಕು ಪಂಚಾಯಿತಿ ಕಾರ್ಯಾ ನಿರ್ವಹಣಾಧಿಕಾರಿ ಡಾ.ಪ್ರಮೋದ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶಿವಕುಮಾರ್, ಸಮಾಜ ಕಲ್ಯಾಣ ಅಧಿಕಾರಿ ದಿನೇಶ್, ಪೊಲೀಸ್ ಉಪ ಅಧೀಕ್ಷಕರಾದ ಶಿವಕುಮಾರ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಸನ್ ಭಾಷಾ, ಬೆಸ್ಕಾo ಸಹಾಯಕ ಕಾರ್ಯಪಾಲಕ ಅಭಿಯಂತರರು ಪೀರ್ ಸಾಬ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading