ಚಿತ್ರದುರ್ಗ ಡಿ.17:
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಇದೇ ಡಿ.21 ರಿಂದ 24 ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ಜಿಲ್ಲೆಯ ನಾಗರಿಕರು, ಸಂಘ-ಸಂಸ್ಥೆಗಳು, ವಿವಿಧ ಇಲಾಖೆಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.
ನೆರೆಯ ದೇಶಗಳಾದ ಪಾಕಿಸ್ತಾನ, ಅಪ್ಘಾನಿಸ್ತಾನದಲ್ಲಿ ಪೋಲಿಯೋ ಪ್ರಕರಣಗಳು ವರದಿಯಾದ್ದರಿಂದ ಅದರ ಪುನರ್ ಆಗಮನ ತಡೆಯಲು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಾಪಾಡುವುದು, ಪೋಲಿಯೋದಿಂದ ಮಕ್ಕಳನ್ನು ರಕ್ಷಿಸುವ ಉದ್ದೇಶದಿಂದ ದೇಶಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ಪ್ರಯುಕ್ತ ಜಿಲ್ಲೆಯಾದ್ಯಂತ ಇದೇ ಡಿ.21 ರಿಂದ 24 ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಹಿಂದೆ ಎಷ್ಟೇ ಬಾರಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ, ಬರುವ ಭಾನುವಾರ ಡಿ.21ರಂದು ಬೂತ್ ದಿನದಂದು ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.
ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ಕೆ ಜಿಲ್ಲೆಯಲ್ಲಿ 1169 ಬೂತ್ ತಂಡಗಳನ್ನು ರಚಿಸಲಾಗಿದ್ದು, 1,26,361 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ಪ್ರಯುಕ್ತ ಎಲ್ಲಾ ನಾಗರಿಕರು, ಸಂಘ-ಸಂಸ್ಥೆಗಳು, ಮಾಧ್ಯಮ ಮಿತ್ರರು, ವಿವಿಧ ಇಲಾಖೆಗಳು ಸಹಕರಿಸಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.
ದೇಶಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತಿದ್ದು, ಐದು ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಇದೇ ಭಾನುವಾರ 21ರಂದು ಸಮೀಪದ ಪೋಲಿಯೋ ಬೂತ್ಗಳಿಗೆ ಕರೆದುಕೊಂಡು ಹೋಗಿ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವ ಮುಖಾಂತರ ಮಕ್ಕಳ ಆರೋಗ್ಯ ಅಭಿವೃದ್ಧಿಗೆ ಸರ್ವರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಕೋರಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.