ಚಿತ್ರದುರ್ಗಸೆ.19:
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಶಾಸಕರ ಹಾಗೂ ಸಾಂಸ್ಥಿಕ ಕೋಟಾದಡಿ ಆಯ್ಕೆಯಾದ ಹಿರಿಯೂರು ಮತ್ತು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಒಟ್ಟು 13 ಫಲಾನುಭವಿಗಳಿಗೆ ಮೋಟಾರ್ ಪಂಪ್ ಹಾಗೂ ಬಿಡಿಭಾಗಗಳನ್ನು ಶನಿವಾರ ವಿತರಿಸಲಾಯಿತು.
ನಗರದ ಚಳ್ಳಕೆರೆ ರಸ್ತೆಯ ಶ್ರೀರಾಮ ಕಲ್ಯಾಣ ಮಂಟಪದ ಆವರಣದಲ್ಲಿ ಫಲಾನುಭವಿಗಳಿಗೆ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಗಂಗಾ ಕಲ್ಯಾಣ ಯೋಜನೆಯಡಿ ಹಿರಿಯೂರು ತಾಲ್ಲೂಕಿನ 8 ಹಾಗೂ ಚಳ್ಳಕೆರೆ ತಾಲ್ಲೂಕಿನ 5 ಫಲಾನುಭವಿಗಳಿಗೆ ಈಗಾಗಲೇ ಕೊಳವೆಬಾವಿ ಕೊರೆಸಲಾಗಿದ್ದು, ನೀರು ಲಭ್ಯವಾಗಿರುವುದು ಖಚಿತವಾಗಿದೆ. ವಿದ್ಯುತ್ ಸಂಪರ್ಕವೂ ದೊರೆತಿದ್ದು, ರೈತರು ಕೃಷಿ ಚಟುವಟಿಕೆಗೆ ತಕ್ಷಣವೇ ನೀರು ಬಳಸಿಕೊಳ್ಳಲು ಅನುಕೂಲವಾಗುವಂತೆ ಸಾಂಕೇತಿಕವಾಗಿ ಮೋಟಾರ್ ಪಂಪ್ ಮತ್ತು ಬಿಡಿಭಾಗಗಳನ್ನು ವಿತರಿಸಲಾಗುತ್ತಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 122 (ಶಾಸಕರ ಕೋಟಾ 36, ಸಾಂಸ್ಥಿಕ ಕೋಟಾ 34 ಹಾಗೂ ನಿಗಮದ ಅಧ್ಯಕ್ಷರು ಮತ್ತು ನಿರ್ದೇಶಕರ ಕೋಟಾ 52 ಸೇರಿ) ಫಲಾನುಭವಿಗಳಿಗೆ ಸೌಲಭ್ಯ ನೀಡುವ ಗುರಿ ಹೊಂದಲಾಗಿದೆ. ಇದರ ಜೊತೆಗೆ ನೇರ ಸಾಲ ಯೋಜನೆಯಡಿ 434 ಜನರಿಗೆ, ಉದ್ಯಮಶೀಲತೆ ಅಭಿವೃದ್ಧಿ ಯೋಜನೆಯಡಿ 41 ಜನರಿಗೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ 111 ಜನರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಅವರ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲೆಯ ಆರೂ ತಾಲ್ಲೂಕುಗಳಿಗೆ ನಿಗಮದ ಯೋಜನೆಗಳು ಹೆಚ್ಚಿನ ಪ್ರಮಾಣದಲ್ಲಿ ತಲುಪುತ್ತಿವೆ. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ, ನಿಗಮದ ಜಿಲ್ಲಾ ವ್ಯವಸ್ಥಾಪಕ ರವಿಕುಮಾರ್ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

About The Author
Discover more from JANADHWANI NEWS
Subscribe to get the latest posts sent to your email.