
ಚಿತ್ರದುರ್ಗ.ನ.19:
ನ.19 ರಿಂದ ಡಿ.20ರ ವರೆಗೆ ಜಿಲ್ಲೆಯಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ ಹಾಗೂ ಬಹಿರ್ದೇಸೆ ಮುಕ್ತ ವಾತಾವರಣ ಸೃಷ್ಠಿಸಿ, ನಿರಂತರವಾಗಿ ಶೌಚಾಲಯಗಳನ್ನು ಬಳಸಲು ಪ್ರೇರೇಪಿಸುಲು ಒತ್ತು ನೀಡುವುದಾಗಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಹೇಳಿದರು.
ನಗರದ ಜಿ.ಪಂ.ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ, ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮದಲ್ಲಿ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಂದದ ಶೌಚಾಲಯ-ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಆಂದೋಲನ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಜಿಲ್ಲೆಯಲ್ಲಿ ಬಳಕೆಯಲ್ಲಿ ಇರದ ಸಮುದಾಯ ಶೌಚಾಲಯಗಳನ್ನು ಗುರುತಿಸಿ, ದುರಸ್ಥಿಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತ ಮಾಡಲಾಗುವುದು. ಶೌಚಾಲಯಗಳ ಕೊರತೆ ಇರುವ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ಹೊಸದಾಗಿ ಶೌಚಾಲಯ ನಿರ್ಮಿಸಲಾಗುವುದು. ಸ್ವಚ್ಛತೆ ಕಾರ್ಯದಲ್ಲಿ ತೊಡಗಿರುವ ಪೌರ ಕಾರ್ಮಿಕರಿಗೆ ಆರೋಗ್ಯ ಶಿಬಿರ ಆಯೋಜಿಸಿ, ಸುರಕ್ಷಾ ಪರಿಕರಗಳನ್ನು ವಿತರಿಸುವುದರ ಜೊತೆಗೆ ಗೌರವಿಸಲಾಗುವುದು ಎಂದು ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ತಿಳಿಸಿದರು.
ಈಗಾಗಲೇ ಜಿಲ್ಲೆಯನ್ನು ಬಯಲು ಶೌಚಮುಕ್ತ ಪ್ರದೇಶ ಎಂದು ಘೋಷಿಸಲಾಗಿದೆ. ಪ್ರಸಕ್ತ ವರ್ಷ 16 ಸಾವಿರ ಶೌಚಾಲಯಗಳ ನಿರ್ಮಾಣದ ಗುರಿ ನಿಗದಿಪಡಿಸಿಕೊಳ್ಳಲಾಗಿದೆ. ಹಳ್ಳಿಗಳಲ್ಲಿ ಶೌಚಾಲಯ ಹೊಂದಿರದವರು ಶೌಚಾಲಯ ಕಟ್ಟಿಸಿಕೊಳ್ಳಲು ಮುಂದೆ ಬಂದರೆ ಅವರಿಗೆ ಸರ್ಕಾರದಿಂದ ಸಹಾಯಧನ ನೀಡಲಾಗುವುದು. ಸಾರ್ವಜನಿಕರು ಸಿಟಿಜನ್ ಪೋರ್ಟ್ಲ್ ಅರ್ಜಿಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲ್ಲೂಕು, ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ನೇರವಾಗಿ ಭೇಟಿ ನೀಡಬಹುದು. ಆಯ್ಕೆಯಾದ ಎಸ್.ಸಿ ಹಾಗೂ ಎಸ್.ಟಿ ಫಲಾನುಭವಿಗಳಿಗೆ ರೂ.20,000 ಇತರೆ ಫಲಾನುಭವಿಗಳಿಗೆ ರೂ.12,000 ಸಹಾಯಧನ ನೀಡುವುದಾಗಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಮಾಹಿತಿ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಮಹಿಳೆಯರ ಶೌಚಾಲಯವನ್ನು ಉದ್ಘಾಟಿಸಲಾಯಿತು. ಡಿ.ಎಸ್.ಹಳ್ಳಿ ಗ್ರಾಮ ಪಂಚಾಯಿತಿಯ ಮೂವರು ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣದ ಕಾರ್ಯಾದೇಶ ನೀಡಲಾಯಿತು.
ಜಿ.ಪಂ.ಮುಖ್ಯ ಯೋಜನಾಧಿಕಾರಿ ಗ್ರಾಯಿತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಾಸದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್ ಸೇರಿದಂತೆ ಮತ್ತಿತರು ಉಪಸ್ಥಿರಿದ್ದರು.




About The Author
Discover more from JANADHWANI NEWS
Subscribe to get the latest posts sent to your email.