February 20, 2026
FB_IMG_1771597982045.jpg

ಚಿತ್ರದುರ್ಗಫೆ.20:
ಜಿಲ್ಲೆಯಲ್ಲಿ ಜನಗಣತಿ ಪ್ರಕ್ರಿಯೆಯನ್ನು ಸುಗಮ ಹಾಗೂ ವ್ಯವಸ್ಥಿತವಾಗಿ ನಡೆಸಲು ಕಾರ್ಯಯೋಜನೆ ರೂಪಿಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ 2027ರ ಜನಗಣತಿ ಸಿದ್ಧತೆಗಳ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2026ರ ಏಪ್ರಿಲ್ 01 ರಿಂದ ಅಧಿಕೃತವಾಗಿ ಜನಗಣತಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದು, ಇದರ ಪ್ರಯುಕ್ತ ಗಣತಿ ಕಾರ್ಯವು ಯಾವುದೇ ಲೋಪವಿಲ್ಲದೆ ಹಾಗೂ ಅತ್ಯಂತ ಪರಿಣಾಮಕಾರಿಯಾಗಿ ನಡೆಯಲು ಜಿಲ್ಲೆಯನ್ನು ವಿವಿಧ ಬ್ಲಾಕ್‍ಗಳಾಗಿ ವಿಂಗಡಿಸಲಾಗಿದೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮುಖ್ಯ ಜನಗಣತಿ ಅಧಿಕಾರಿಗಳಾಗಿ, ಅಪರ ಜಿಲ್ಲಾಧಿಕಾರಿಗಳು ಜಿಲ್ಲಾ ಜನಗಣತಿ ಅಧಿಕಾರಿಯಾಗಿ ಜವಾಬ್ದಾರಿ ವಹಿಸಲಿದ್ದಾರೆ. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‍ಗಳು, ಉಪವಿಭಾಗ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳು ಹಾಗೂ ನಗರ ಪ್ರದೇಶಗಳಲ್ಲಿ ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಚಾರ್ಜ್ ಆಫೀಸರ್‍ಗಳಾಗಿ ಜನಗಣತಿಯ ನೇತೃತ್ವ ವಹಿಸಲಿದ್ದು, ಜನಗಣತಿ ನಿರ್ದೇಶನಾಲಯದ ಅನುಸಾರ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಹೇಳಿದರು.
ಪ್ರತಿ ಮತಗಟ್ಟೆಗೆ ಒಬ್ಬ ಬಿಎಲ್‍ಒ ಇರಲಿದ್ದು, ಒಂದು ಮತಗಟ್ಟೆ ವ್ಯಾಪ್ತಿಯಲ್ಲಿ ಸುಮಾರು 150 ರಿಂದ 200 ಮನೆಗಳಿಗಿದ್ದು, ಪ್ರತಿ 150 ರಿಂದ 200 ಮನೆಗಳಿಗೆ ಒಬ್ಬರು ಗಣತಿದಾರ ನೇಮಕ ಹಾಗೂ ಪ್ರತಿ ಆರು ಗಣತಿದಾರರ ಕಾರ್ಯವೈಖರಿ ಉಸ್ತುವಾರಿ ಮಾಡಲು ಒಬ್ಬರು ಸೂಪರ್ ವೈಸರ್ (ಮೇಲ್ವಿಚಾರಕರು) ನೇಮಿಸಲು ತೀರ್ಮಾನಿಸಲಾಗಿದ್ದು, ಎಸ್‍ಐಆರ್ ಹಾಗೂ ಶಾಲಾ-ಕಾಲೇಜುಗಳ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯಕ್ಕೆ ಅಡ್ಡಿಯಾಗದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಟ್ಟಿಯನ್ನು ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾಂತರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಸೇರಿದಂತೆ ತಹಶೀಲ್ದಾರ್‍ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading