ನಾಯಕನಹಟ್ಟಿ :
ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಂಪೂರ್ಣ ಸಿದ್ಧರಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಜಾಗನೂರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ತಿಪ್ಪೇಸ್ವಾಮಿ ಬಿ. ಮನವಿ ಮಾಡಿದರು.
ಪಟ್ಟಣದ ಜಾಗನೂರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು “ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ” ಎಂಬ ಸಂದೇಶದೊಂದಿಗೆ ಗ್ರಾಮದ ಮುಖ್ಯ ರಸ್ತೆಗಳಲ್ಲಿ ಜಾಗೃತಿ ಮೆರವಣಿಗೆ ನಡೆಸಿದರು. 2026–27ನೇ ಶೈಕ್ಷಣಿಕ ಸಾಲಿನಿಂದ 4–5 ವರ್ಷದ ಮಕ್ಕಳಿಗೆ ಉಚಿತ ಎಲ್.ಕೆ.ಜಿ. ತರಗತಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.
ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಪ್ರವೇಶ ಹಾಗೂ ದಾಖಲಾತಿ, ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಿಕ್ಷಣ, ನುರಿತ ಹಾಗೂ ಅನುಭವಿ ಶಿಕ್ಷಕರು, ಸುಸಜ್ಜಿತ ತರಗತಿ ಕೊಠಡಿಗಳು, ಶೌಚಾಲಯ ಸೌಲಭ್ಯ, ಉಚಿತ ಸಮವಸ್ತ್ರ, ಪಠ್ಯಪುಸ್ತಕಗಳು, ಮಧ್ಯಾಹ್ನದ ಬಿಸಿ ಊಟ ಯೋಜನೆ, ಕ್ಷೀರಭಾಗ್ಯ ಮೊಟ್ಟೆ, ಬಾಳೆಹಣ್ಣು, ರಾಗಿ ಮಾಲ್ಟ್, ವಿಶೇಷ ಅಗತ್ಯವಿರುವ ಮಕ್ಕಳಿಗೆ ಸೌಲಭ್ಯಗಳು, ಸ್ಪೋಕನ್ ಇಂಗ್ಲಿಷ್ ತರಬೇತಿ, ವೈದ್ಯಕೀಯ ತಪಾಸಣೆ, ಗ್ರಂಥಾಲಯ ಹಾಗೂ ಪ್ರಯೋಗಾಲಯ, ರೇಡಿಯೋ ಪಾಠಗಳು, ಕಂಪ್ಯೂಟರ್ ಆಧಾರಿತ ಶಿಕ್ಷಣ, ಪರಿಹಾರ ಬೋಧನೆ, ಪ್ರತಿಭಾ ಕಾರಂಜಿ, ಕ್ರೀಡಾಕೂಟ, ಇನ್ಸ್ಪೈರ್ ಅವಾರ್ಡ್ ಸೇರಿದಂತೆ ಯಾವುದೇ ಶುಲ್ಕವಿಲ್ಲದೆ ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
“ಮಗುವಿನ ಅಕ್ಷರ ಓಟ ಮನೆಯ ಹತ್ತಿರದ ಸರ್ಕಾರಿ ಶಾಲೆಯಿಂದಲೇ ಆರಂಭವಾಗಲಿ”, “ನಮ್ಮೂರ ಶಾಲೆ ನಮ್ಮ ಹೆಮ್ಮೆ”, “ಖಾಸಗಿ ಶಾಲೆಗಳಿಗೆ ಸರಿಸಾಟಿ ನಮ್ಮ ಸರ್ಕಾರಿ ಶಾಲೆ” ಎಂಬ ಘೋಷಣೆಗಳನ್ನು ಕೂಗುತ್ತಾ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಸಹಶಿಕ್ಷಕಿ ಶಿವಮ್ಮ ಟಿ., ಸಹಶಿಕ್ಷಕಿ ಸುಬ್ಬಲಕ್ಷ್ಮಿ ಕೆ., ದೈಹಿಕ ಶಿಕ್ಷಣ ಶಿಕ್ಷಕ ಕುಬೇರಪ್ಪ ಕೆ., ಸಹ ಶಿಕ್ಷಕ ಬಸವರಾಜ್ ಎನ್., ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಜಾಗನೂರಹಟ್ಟಿ ಗ್ರಾಮಸ್ಥರು, ದೇವರಾಜ್ ಜಿ.ಪಿ., ಕುಮಾರ್ ಜಿ.ಪಿ., ಸುರೇಶ್ ಜಿ.ಪಿ., ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.