ಹೊಸದುರ್ಗ, ಜು.23: ಹೊಸದುರ್ಗ ಪಟ್ಟಣದಲ್ಲಿ ವಿಶ್ವಕರ್ಮ ಜಗದ್ಗುರು ಅರೆಮಾದನಹಳ್ಳಿ ಮಹಾಸಂಸ್ಥಾನದ ಶಾಖಾ ಮಠ ಸ್ಥಾಪನೆಗೆ ಅಗತ್ಯ ಭೂಮಿ ಒದಗಿಸುವುದರ ಜೊತೆಗೆ,
ಹೊಸದುರ್ಗ, ಜು.23: ಹೊಸದುರ್ಗ ಪಟ್ಟಣದಲ್ಲಿ ವಿಶ್ವಕರ್ಮ ಜಗದ್ಗುರು ಅರೆಮಾದನಹಳ್ಳಿ ಮಹಾಸಂಸ್ಥಾನದ ಶಾಖಾ ಮಠ ಸ್ಥಾಪನೆಗೆ ಅಗತ್ಯ ಭೂಮಿ ಒದಗಿಸುವುದರ ಜೊತೆಗೆ, ತಾಲೂಕಿನ ಮಾರಬಘಟ್ಟ ಗ್ರಾಮದ ಶ್ರೀ ಕಾಳಿಕಾಂಬ ಶಿಲಾ ಶಿಲ್ಪ ದೇವಸ್ಥಾನ ನಿರ್ಮಾಣಕ್ಕೆ ₹50 ಲಕ್ಷ ಅನುದಾನ ನೀಡಲು ಕ್ರಮ ಕೈಗೊಳ್ಳುವುದಾಗಿ ಶಾಸಕ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ ಭರವಸೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಅವರು ಶಾಸಕರನ್ನು ಭೇಟಿ ಮಾಡಿ, ಹೊಸದುರ್ಗದಲ್ಲಿ ಶಾಖಾ ಮಠ ನಿರ್ಮಾಣಕ್ಕಾಗಿ ಸೂಕ್ತ ಜಾಗ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಗೋವಿಂದಪ್ಪ, ಶೀಘ್ರದಲ್ಲಿಯೇ ಮಠಕ್ಕೆ ಭೂಮಿ ಮಂಜೂರು ಮಾಡುವ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ತಾಲೂಕಿನ ಮಾರಬಘಟ್ಟ ಗ್ರಾಮದ ಶ್ರೀ ಕಾಳಿಕಾಂಬ ಸೇವಾ ಸಮಿತಿ ಪದಾಧಿಕಾರಿಗಳು ಶಾಸಕರನ್ನು ಭೇಟಿ ಮಾಡಿ, ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಕಾಳಿಕಾಂಬ ಶಿಲಾ ಶಿಲ್ಪ ದೇವಸ್ಥಾನಕ್ಕೆ ₹50 ಲಕ್ಷ ಅನುದಾನ ನೀಡುವಂತೆ ಮನವಿ ಮಾಡಿದರು. ಇದಕ್ಕೂ ಸ್ಪಂದಿಸಿದ ಶಾಸಕರು, ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಅಲ್ಲದೆ, ದೇವಸ್ಥಾನದ ಶಂಕುಸ್ಥಾಪನೆಯನ್ನು ತಕ್ಷಣವೇ ನೆರವೇರಿಸಿ ನಿರ್ಮಾಣ ಕಾಮಗಾರಿಗಳನ್ನು ವಿಳಂಬವಿಲ್ಲದೆ ಆರಂಭಿಸುವಂತೆ ಸಮಿತಿ ಸದಸ್ಯರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ, ಶಾಸಕ ಬಿ.ಜಿ. ಗೋವಿಂದಪ್ಪ, ಡಾ. ಪೂರ್ವಚಾರ್ ಹಾಗೂ ಕಾಂಗ್ರೆಸ್ ಮುಖಂಡ ಆಗ್ರೋ ಶಿವಣ್ಣ ಅವರನ್ನು ವಿಶ್ವಕರ್ಮ ಸಮಾಜದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ರಾಜ್ಯಾಧ್ಯಕ್ಷ ಎಂ. ಸೋಮಶೇಖರ್ (ಕನ್ನಡ ಸೋಮು), ರಾಜ್ಯ ಪ್ರಧಾನ ಕಾರ್ಯದರ್ಶಿ ಮಾರಬಗಟ್ಟ ಪರಮೇಶ್ವರಾಚಾರ್, ಉಪಾಧ್ಯಕ್ಷ ಕೆ.ಟಿ. ಜಯಣ್ಣ, ಹಿರಿಯ ಕೀರ್ತನಕಾರ ಎಂ.ವಿ. ರಂಗಾಚಾರ್ ಸೇರಿದಂತೆ ತಾಲೂಕು ವಿಶ್ವಕರ್ಮ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

About The Author
Discover more from JANADHWANI NEWS
Subscribe to get the latest posts sent to your email.