ಚಿತ್ರದುರ್ಗಡಿ.23:
ಬಾಲ್ಯವಿವಾಹ ನಡೆಸುವುದು ಶಿಕ್ಷಾರ್ಹ ಅಪರಾಧ. ಬಾಲ್ಯವಿವಾಹ ಮಾಡಿ ಮಕ್ಕಳ ಜೀವನ ಹಾಳು ಮಾಡಬೇಡಿ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಜೋಡಿಚಿಕ್ಕೇನಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಬಾಲ್ಯವಿವಾಹ ತಡೆಗಟ್ಟಲು ಮಕ್ಕಳ ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು.
ಬಾಲ್ಯವಿವಾಹ ಸಮಾಜದಲ್ಲಿ ಕೆಟ್ಟ ಆಚರಣೆಯಾಗಿದೆ. ಸಮಾಜಕ್ಕೆ ಇದೊಂದು ದೊಡ್ಡ ಪಿಡುಗಾಗಿ ಇವತ್ತಿಗೂ ಕಾಡುತ್ತಿದೆ. ಇದರ ವಿರುದ್ಧ ಜಾಗೃತಿ ಮೂಡಿಸಿ ಪಿಡುಗು ತಡೆಗಟ್ಟಲು ಸಮುದಾಯದ ಸಹಕಾರ ಅತ್ಯಗತ್ಯವಾಗಿದೆ ಎಂದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ಬಾಲ್ಯ ವಿವಾಹಕ್ಕೆ ಬಡತನ, ಅನಕ್ಷರತೆ, ಮೂಢನಂಬಿಕೆ ಸೇರಿದಂತೆ ಹಲವು ಕಾರಣ ನೀಡಬಹುದು. ಇದರಲ್ಲಿ ವರದಕ್ಷಿಣೆ ದೊಡ್ಡ ಸಮಸ್ಯೆಯಾಗಿದೆ. 21 ವರ್ಷ ಒಳಗಿನ ಹುಡುಗ ಹಾಗೂ 18 ವರ್ಷ ಒಳಗಿನ ಹುಡುಗಿಯರ ನಡುವೆ ಇಲ್ಲವೆ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುತ್ತದೆ. ಇದನ್ನು ಆದಷ್ಟು ತಡೆಗಟ್ಟಿ ಬಾಲ್ಯವಿವಾಹ ಸಂಪೂರ್ಣವಾಗಿ ತೊಲಗಿಸಬೇಕು.ಪೋಷಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಮೂಲಕ ಬಾಲ್ಯ ವಿವಾಹ ತಡೆಗಟ್ಟಲು ಇಲಾಖೆ ಅಷ್ಟೇ ಅಲ್ಲದೆ ಎಲ್ಲರೂ ಮುಂದಾಗಬೇಕು. ಶಿಕ್ಷಣದ ಕೊರತೆಯಿಂದಾಗಿ ಇಂತಹ ಪಿಡುಗುಗಳು ಸಮಾಜದಲ್ಲಿ ಇಂದಿಗೂ ಕಾಡುತ್ತಿದೆ ಎಂದರು.
ಕಾಸರಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಾವ್ಯ ಮಾತನಾಡಿ, ಬಾಲ್ಯ ವಿವಾಹದಿಂದ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದ್ದು, ತಾಯಂದಿರ ಮರಣ ಶಿಶು ಮರಣಕ್ಕೆ ಕಾರಣವಾಗುತ್ತದೆ. ಹಾಗಾಗಿ ನಿಮ್ಮೆಲ್ಲರಲ್ಲಿ ನನ್ನ ಕಳಕಳಿಯ ಪ್ರಾರ್ಥನೆ, ಬಾಲ್ಯ ವಿವಾಹವನ್ನು ಮಾಡಬೇಡಿ ಎಂದರು.
ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕರಾದ ಮಂಜುನಾಥ್ ಮಾತನಾಡಿ, ಶಿಕ್ಷಣ ಮೊದಲು ನಂತರ ವಿವಾಹ ಮಾಡುವುದು ಉತ್ತಮ ಜೀವನಕ್ಕೆ ನಾಂದಿ ಹಾಡುತ್ತದೆ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, 100 ದಿನಗಳ ಕ್ಷಯರೋಗ ನಿಯಂತ್ರಣ ಅಭಿಯಾನದ ಕುರಿತು ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜೆ.ಎನ್.ಕೋಟೆ ಗ್ರಾಮ ಪಂಚಾಯಿತಿ ಸದಸ್ಯೆ ವಿಜಯಮ್ಮ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಪವಿತ್ರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತುಕಾರಾಂ, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಪೋಷಕರು ಭಾಗವಹಿಸಿದ್ದರು.

About The Author
Discover more from JANADHWANI NEWS
Subscribe to get the latest posts sent to your email.