ಚಿತ್ರದುರ್ಗ ಫೆ.24:
ಬ್ಯಾಂಕುಗಳಲ್ಲಿ 100 ದಿನಗಳ ಕಾಲ ವಿಶೇಷ ಅಭಿಯಾನ ಹಮ್ಮಿಕೊಳ್ಳವ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳಾದ ಪಿ.ಎಂ.ಜೆ.ಜೆ.ಬಿ.ವೈ (ಪ್ರಧಾನಮಂತ್ರಿ ಜೀವನ್ ಜ್ಯೋತಿ ಭಿಮಾ ಯೋಜನೆ), ಪಿ.ಎಂ.ಎಸ್.ಬಿ.ವೈ (ಪ್ರಧಾನಮಂತ್ರಿ ಸುರಕ್ಷಾ ಭಿಮಾ ಯೋಜನೆ) ಮತ್ತು ಎ.ಪಿ.ವೈ (ಅಟಲ್ ಪೆನ್ಷನ್ ಯೋಜನೆ) ನೊಂದಣಿಗೆ ಶ್ರಮ ವಹಿಸುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಸೂಚಿಸಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನೇತೃತ್ವದಲ್ಲಿ ಜರುಗಿದ ಜಿಲ್ಲಾ ಸಲಹಾ ಸಮಿತಿ ಹಾಗೂ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ನೊಂದಣಿಯಾದವರ ಪ್ರಮಾಣ ಅತ್ಯಂತ ಕಡಿಮೆಯಿದೆ. ಜಿಲ್ಲೆಯ ಬ್ಯಾಂಕ್ಗಳ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆಯ ಕ್ರಮಗಳಿಂದಾಗಿ ಕಡಿಮೆ ಪ್ರಮಾಣದ ನೊಂದಣಿಯಾಗಿದೆ. ಪ್ರಧಾನಮಂತ್ರಿ ಜೀವನ್ ಜ್ಯೋತಿ ಬೀಮಾ ಯೋಜನೆಯಡಿ 18 ರಿಂದ 50 ವಯಸ್ಸಿನವರೆಗಿನ ನಾಗರಿಕರು ರೂ.436/-ಗಳ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬೀಮಾ ಯೋಜನೆಯಡಿ 18 ರಿಂದ 70 ವಯಸ್ಸಿನವರೆಗಿನ ನಾಗರೀಕರು ರೂ.20/- ಪ್ರೀಮಿಯಂ ಹಣವನ್ನು ವಾರ್ಷಿಕವಾಗಿ ಪಾವತಿಸಿದರೆ, ಯಾವುದೇ ರೀತಿಯ ಮರಣ ಸಂಭವಿಸಿದರೂ ಅವರ ವಾರಸುದಾರಿಗೆ ಪ್ರತಿ ಯೋಜನೆಯಡಿ ರೂ.2 ಲಕ್ಷದವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಈ ಬಗ್ಗೆ ಗ್ರಾಹಕರ ಮನವೊಲಿಸಿ ನೊಂದಣಿ ಮಾಡಿಸುವಂತೆ ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಹೇಳಿದರು.
ಬ್ಯಾಂಕ್ ಆಫ್ ಬರೋಡಾ ಜಿಲ್ಲೆಯ ಶಾಖೆಗಳಲ್ಲಿ ಸುಮಾರು 1.79 ಲಕ್ಷ ಅರ್ಹ ಖಾತೆದಾರರನ್ನು ಹೊಂದಿದೆ. ಆದರೆ ಸಾಮಾಜಿಕ ಭದ್ರತಾ ಯೋಜನೆಗಳಿಡಿ 1,150 ನೋಂದಣಿಗಳನ್ನು ಮಾತ್ರ ಮಾಡಿದೆ. ಇದೇ ರೀತಿ ಅಪೆಕ್ಸ್ ಬ್ಯಾಂಕ್ನಲ್ಲಿ 1.20 ಲಕ್ಷ ಖಾತೆಗಳಿದ್ದರೂ ಕೇವಲ 1,080 ನೋಂದಣಿ ಮಾಡಲಾಗಿದೆ. ಈ ಬ್ಯಾಂಕುಗಳು ಮುಂದಿನ 100 ದಿನಗಳ ಅಭಿಯಾನದಲ್ಲಿ, ಪ್ರತಿ ಶಾಖೆಯಲ್ಲಿ ದಿನ ಒಂದಕ್ಕೆ 10 ಸಾಮಾಜಿಕ ಭದ್ರತಾ ಯೋಜನೆಗಳ ನೊಂದಣಿ ಮಾಡುವ ಮೂಲಕ ಸುಮಾರು 10,000 ನೊಂದಣಿಗಳ ಗುರಿಯನ್ನು ಸಾಧಿಸಬೇಕು ಎಂದು ಜಿ.ಪಂ.ಸಿಇಓ ಡಾ.ಎಸ್.ಆಕಾಶ್ ನಿರ್ದೇಶನ ನೀಡಿದರು.
ಸಾಮಾಜಿಕ ಭದ್ರತಾ ಯೋಜನೆಗಳಿಡಿ 21,865 ನೊಂದಣಿ ಮಾಡಿ ಪ್ರಥಮ ಸ್ಥಾನ ಪಡೆದ ಕರ್ನಾಟಕ ಗ್ರಾಮೀಣ ಬ್ಯಾಂಕ್, 11,392 ನೊಂದಣಿ ಮಾಡಿದ ಕೆನರಾ ಬ್ಯಾಂಕ್ ದ್ವಿತೀಯ ಸ್ಥಾನ ಪಡೆದಿದ್ದಕ್ಕಾಗಿ ಈ ಸಂದರ್ಭದಲ್ಲಿ ಜಿ.ಪಂ. ಸಿಇಓ ಡಾ.ಆಕಾಶ್ ಅಭಿನಂದನೆ ಸಲ್ಲಿಸಿದರು. ಜೂನ್ ಮೊದಲ ವಾರದಲ್ಲಿ ನಡೆಯಲಿರುವ ಮುಂದಿನ ಪ್ರಗತಿ ಪರಿಶೀಲನಾ ಸಭೆಯೊಳಗೆ ಈ ಗುರಿ ತಲುಪದಿದ್ದರೆ, ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ನಡವಳಿಯಲ್ಲಿ ದಾಖಲಿಸಿ ಆರ್.ಬಿ.ಐ ಗೆ ವರದಿ ಸಲ್ಲಿಸುವುದಾಗಿ ಎಚ್ಚರಿಸಿದರು.
ಗ್ರಾಮೀಣ ಭಾಗದ ಬ್ಯಾಂಕ್ಗಳ ಸ್ಥಳಾಂತರಕ್ಕೆ ತಡೆ:
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಕೆನರಾ ಬ್ಯಾಂಕ್ನ ಆರು ಶಾಖೆಗಳನ್ನು ಮೂಲಭೂತ ಸೌಕರ್ಯಗಳ ಕೊರತೆಯ ನೆಪದಲ್ಲಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಜಿ.ಪಂ. ಸಿಇಓ ಡಾ. ಎಸ್. ಆಕಾಶ್ ಸಭೆಯಲ್ಲಿ ಸೂಚನೆ ನೀಡಿದರು.
ಶಾಖೆಗಳ ಸ್ಥಳಾಂತರಕ್ಕೆ ಬ್ಯಾಂಕ್ ಅಧಿಕಾರಿಗಳು ಸಲ್ಲಿಸಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಅವರು, ಗ್ರಾಮೀಣ ಭಾಗದ ಜನರಿಗೆ ತೊಂದರೆಯಾಗದಂತೆ ಅದೇ ಸ್ಥಳಗಳಲ್ಲಿ ಬ್ಯಾಂಕ್ ಮುಂದುವರಿಸಲು ಸೂಚಿಸಿದರು. ಗ್ರಾಮ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಅಧಿಕಾರಿಗಳು ಮಾರ್ಚ್ 31 ರೊಳಗೆ ಅಗತ್ಯ ದುರಸ್ತಿ ಹಾಗೂ ನವೀಕರಣ ಕಾರ್ಯಗಳನ್ನು ಪೂರ್ಣಗೊಳಿಸುತ್ತಾರೆ. ಪಂಚಾಯತ್ ವತಿಯಿಂದ ಆಗಬೇಕಿರುವ ಕೆಲಸಗಳಲ್ಲಿ ವಿಳಂಬವಾದರೆ ನೇರವಾಗಿ ಗಮನಕ್ಕೆ ತರುವಂತೆ ಜಿ.ಪಂ.ಸಿಇಓ ಡಾ.ಎಸ್.ಆಕಾಶ್ ತಿಳಿಸಿದರು.
ನಿಷ್ಕ್ರಿಯ ಠೇವಣಿ ವಿಲೇವಾರಿಗೆ ಕಟ್ಟುನಿಟ್ಟಿನ ಸೂಚನೆ:
ಜಿಲ್ಲೆಯ ವಿವಿಧ ಬ್ಯಾಂಕ್ಗಳಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ಯಾವುದೇ ವ್ಯವಹಾರವಿಲ್ಲದೆ ಉಳಿದಿರುವ ಹಕ್ಕು ಪಡೆಯದ ಠೇವಣಿಗಳನ್ನು (Unclaimed Deposits) ವಾರಸುದಾರರಿಗೆ ತಲುಪಿಸಲು ವಿಶೇಷ ಅಭಿಯಾನವನ್ನು ಚುರುಕುಗೊಳಿಸುವಂತೆ ಜಿ.ಪಂ. ಸಿಇಓ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ 3,08,898 ನಿಷ್ಕ್ರಿಯ ಖಾತೆಗಳಲ್ಲಿ ಒಟ್ಟು 67 ಕೋಟಿ ಹಣವಿದೆ. ಈ ಪೈಕಿ ಕಳೆದ ಅಕ್ಟೋಬರ್ 01 ರಿಂದ ಡಿಸೆಂಬರ್ 31 ವರೆಗೆ ನಡೆದ ಅಭಿಯಾನದಲ್ಲಿ 122 ಪ್ರಕರಣಗಳನ್ನು ವಿಲೇವಾರಿ ಮಾಡಿ 5.52 ಕೋಟಿ ರೂ. ಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಲಾಗಿದೆ. ಇದು ಒಟ್ಟು ಮೊತ್ತದ ಕೇವಲ ಶೇ.10 ರಷ್ಟಿದ್ದು ಅಭಿಯಾನದಲ್ಲಿ ಉತ್ತಮ ಪ್ರಗತಿಯಾಗಿರುವುದಿಲ್ಲ. ಬ್ಯಾಂಕ್ಗಳಲ್ಲಿ ಸಾರ್ವಜನಿಕರ ಹಣ ವಾರಸುದಾರರಿಲ್ಲದೆ ಉಳಿಯಬಾರದು. ಅದನ್ನು ಸಂಬಂಧಿಸಿದ ವಾರಸುದಾರರಿಗೆ ತಲುಪಿಸುವುದು ಬ್ಯಾಂಕ್ಗಳ ಜವಾಬ್ದಾರಿಯಾಗಿದೆ. ಒಂದು ತ್ರೈಮಾಸಿಕಕ್ಕೆ ಮಾತ್ರ ಈ ಅಭಿಯಾನ ಸೀಮಿತವಾದೇ, ವಾರಸುದಾರರನ್ನು ಗುರುತಿಸಿ ಹಣ ಹಿಂದಿರುಗಿಸುವ ಪ್ರಕ್ರಿಯೆಯು ನಿರಂತರವಾಗಿ ನಡೆಯಬೇಕು ಎಂದು ಡಾ. ಆಕಾಶ್ ತಿಳಿಸಿದರು.
ಕನ್ನಡ ಬಳಕೆಗೆ ನಿರ್ದೇಶನ:
ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡ ಭಾμÉಯನ್ನು ಕಡ್ಡಾಯವಾಗಿ ಬಳಸಬೇಕು. ಬ್ಯಾಂಕಿನ ಎಲ್ಲಾ ಅರ್ಜಿಗಳು, ಚಲನ್ ಮತ್ತು ಸುತ್ತೋಲೆಗಳು ಇಂಗ್ಲಿμï ಮತ್ತು ಹಿಂದಿಯೊಂದಿಗೆ ಕಡ್ಡಾಯವಾಗಿ ಸ್ಥಳೀಯ ಭಾμÉಯಲ್ಲಿ ಲಭ್ಯವಿರಬೇಕು. ಗ್ರಾಮೀಣ ಭಾಗದ ಜನರಿಗೆ ಭಾμÉಯ ಸಮಸ್ಯೆಯಿಂದ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಯಾವುದೇ ರೀತಿಯ ಅಡೆತಡೆ ಅಥವಾ ನಿರಾಶೆಯಾಗಬಾರದು. ಪ್ರತಿ ಶಾಖೆಯಲ್ಲಿ ಕನ್ನಡದಲ್ಲಿ ವ್ಯವಹರಿಸುವ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಿಸಬೇಕು. ತಮ್ಮ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿ ಈ ನಿಯಮಗಳು ಪಾಲನೆಯಾಗುತ್ತಿರುವ ಕುರಿತು ಜಿಲ್ಲಾ ಮಟ್ಟದ ಬ್ಯಾಂಕ್ ಸಮನ್ವಯಾಧಿಕಾರಿಗಳು ಮತ್ತು ಪ್ರತಿನಿಧಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದರು.
30 ದಿನಗಳಲ್ಲಿ ಅರ್ಜಿ ವಿಲೇವಾರಿಗೆ ತಾಕೀತು:
ವಿವಿಧ ಇಲಾಖೆ ಹಾಗೂ ನಿಗಮ ಮಂಡಳಿಗಳಿಂದ ಸಾಲ ಸೌಲಭ್ಯಕ್ಕಾಗಿ ಸಲ್ಲಿಕೆಯಾದ ಅರ್ಜಿಗಳನ್ನು 30 ದಿನಗಳ ಒಳಗಾಗಿ ವಿಲೇವಾರಿ ಮಾಡಬೇಕು. ಬ್ಯಾಂಕುಗಳು ವಿಳಂಬ ನೀತಿ ಅನುಸರಿಸಬಾರದು. ಅರ್ಜಿಗೆ ಮಂಜೂರಾತಿ ನೀಡಬೇಕು, ಇಲ್ಲವೇ ತಿರಸ್ಕರಿಸಬೇಕು. ಸಂಬಂಧಪಟ್ಟ ನಿಗಮ ಮಂಡಳಿಗಳ ವ್ಯವಸ್ಥಾಪಕರು ಸಹಾಯಧನ ಅಥವಾ ಸಾಲ ಸೌಲಭ್ಯಕ್ಕಾಗಿ ಬ್ಯಾಂಕುಗಳಿಗೆ ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಹಿಂಬಾಲಿಸಿ ಮಂಜೂರಾತಿಗೆ ಪ್ರಯತ್ನಿಸಬೇಕು ಎಂದು ಜಿ.ಪಂ. ಸಿಇಓ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ರಾಘವೇಂದ್ರ.ಎಂ, ಆರ್.ಬಿ.ಐ. ಪ್ರಾದೇಶಿಕ ವ್ಯವಸ್ಥಾಪಕ ಅರುಣ್ ಕುಮಾರ್, ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ವಿನ್ನತ್, ಕೆನರಾ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕಿ ಸುನಿತಾ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಜಯಲಕ್ಷ್ಮೀ, ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಜಗನಾಥ್ ಸೇರಿದಂತೆ ಬ್ಯಾಂಕುಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು
About The Author
Discover more from JANADHWANI NEWS
Subscribe to get the latest posts sent to your email.