January 29, 2026
IMG-20260125-WA0308.jpg

ಚಳ್ಳಕೆರೆ
ಸಂವಿಧಾನ ಜಾರಿಯಾದ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಮತದಾನ ಹಕ್ಕನ್ನು 21 ವರ್ಷಕ್ಕೆ ನಿಗದಿಪಡಿಸಿದ್ದು, ಮಕ್ಕಳು ಶಿಕ್ಷಣ ಪಡೆದು ವಿದ್ಯಾಭ್ಯಾಸ ಪೂರ್ಣಗೊಳಿಸಿದ ನಂತರವೇ ಮತದಾನ ಹಕ್ಕು ಬಳಸಬೇಕು ಎಂಬ ಉದ್ದೇಶ ಹೊಂದಿದ್ದರು ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಶಮೀರ್ ಪಿ. ನಂದ್ಯಾಲ ಹೇಳಿದರು.ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳು ನಾಳಿನ ಪ್ರಜೆಗಳಲ್ಲ, ಇಂದಿನ ಪ್ರಜೆಗಳೇ ಆಗಿದ್ದಾರೆ. ಸಂವಿಧಾನವು ಅವರಿಗೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದೆ. ಆದರೆ ಪ್ರಾರಂಭದಲ್ಲಿ ಮತದಾನ ಹಕ್ಕು ನೀಡಲಾಗಿರಲಿಲ್ಲ. 1988ರಲ್ಲಿ 62ನೇ ಸಂವಿಧಾನ ತಿದ್ದುಪಡಿ ಮೂಲಕ ಮತದಾನ ವಯಸ್ಸನ್ನು 21ರಿಂದ 18 ವರ್ಷಕ್ಕೆ ಇಳಿಸಲಾಯಿತು. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಗುರುತಿನ ಚೀಟಿ ಪಡೆದು ಮತದಾನ ಮಾಡುವ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ 73 ಶೇಕಡಾ ಹಾಗೂ ಲೋಕಸಭೆ ಚುನಾವಣೆಯಲ್ಲಿ 63.9 ಶೇಕಡಾ ಮತದಾನ ನಡೆದಿದ್ದು, ಸುಮಾರು 36 ಶೇಕಡಾ ಮತದಾರರು ಮತಹಕ್ಕು ಚಲಾಯಿಸಿಲ್ಲ. ಚುನಾವಣಾ ದಿನ ರಜೆ ಸಿಗುತ್ತದೆ ಎಂಬ ಕಾರಣಕ್ಕೆ ಕೆಲವರು ಮತದಾನದಿಂದ ದೂರ ಉಳಿಯುತ್ತಿರುವುದು ಆತಂಕಕಾರಿ ಸಂಗತಿ. ಈ ಕುರಿತು ಜಾಗೃತಿ ಅಗತ್ಯವಿದೆ ಎಂದು ಶಮೀರ್ ಪಿ. ನಂದ್ಯಾಲ ಹೇಳಿದರು.
ವಕೀಲರ ಸಂಘದ ಉಪಾಧ್ಯಕ್ಷರಾದ ಶ್ಯಾಮಲಾ ಮಾತನಾಡಿ, ಪ್ರಜೆಗಳಿಂದ ಪ್ರಜೆಗಳಿಗಾಗಿ ಇರುವ ಸರ್ಕಾರವೇ ಪ್ರಜಾಪ್ರಭುತ್ವ ಸರ್ಕಾರ. ಮತದಾನ ಪದ್ಧತಿ ದೇಶದ ಭದ್ರ ಬುನಾದಿಯಾಗಿದ್ದು, ಇದು ನಾಗರಿಕ ಕರ್ತವ್ಯವೂ ಹೌದು. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ನೋಂದಣಿ ಮಾಡಿಕೊಂಡು ಎಲೆಕ್ಟ್ರಾನಿಕ್ ಮತದಾರರ ಗುರುತಿನ ಚೀಟಿ ಪಡೆದು, ಯಾವುದೇ ಹಣದ ಆಮಿಷಕ್ಕೆ ಬಲಿಯಾಗದೆ ಯೋಗ್ಯ ನಾಯಕನನ್ನು ಆಯ್ಕೆ ಮಾಡಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ರೇಹಾನ್ ಪಾಷಾ, ಇಒ ಶಶಿಧರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದೇವಲಾಲ್ ನಾಯ್ಕ, ಬಿಸಿಎಂ ಅಧಿಕಾರಿ ರಮೇಶ್ ಕುಮಾರ್, ಬಿಇಒ ಕೆ.ಎಸ್. ಸುರೇಶ್, ಕಂದಾಯ ಇಲಾಖೆ ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್‌ಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading