January 29, 2026
FB_IMG_1769433803844.jpg

ಚಿತ್ರದುರ್ಗ ಜ.26:
ಭಾರತದ ಇತಿಹಾಸದಲ್ಲಿ ಜನವರಿ 26 ಒಂದು ಸುವರ್ಣ ದಿನ. ಈ ದಿನದಂದು ನಮ್ಮ ದೇಶವು ತನ್ನದೇ ಆದ ಸಂವಿಧಾನವನ್ನು ಅಳವಡಿಸಿಕೊಂಡು ಸಂಪೂರ್ಣ ಗಣರಾಜ್ಯವಾಯಿತು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ‍್ಯ ಮತ್ತು ನ್ಯಾಯವನ್ನು ಒದಗಿಸಿದೆ. ಇಂತಹ ಸಂವಿಧಾನ ಆಶಯಗಳನ್ನು ಪಾಲಿಸುವುದು ನಮ್ಮಲ್ಲರ ಹೊಣೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಬಿ.ವೈ. ಯುವರಾಜ್ ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
1947ರಲ್ಲಿ ನಮಗೆ ಸ್ವಾತಂತ್ರ‍್ಯ ಸಿಕ್ಕಿದ್ದರೂ, ಜನವರಿ 26, 1950ರಂದು ಸಂವಿಧಾನ ಜಾರಿಗೆ ಬಂದಾಗ ಮಾತ್ರ ನೈಜ ಅರ್ಥದಲ್ಲಿ ‘ಪ್ರಜಾಪ್ರಭುತ್ವ’ ಆರಂಭವಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ನಮ್ಮ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದುದು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅಂತಹ ಮಹನೀಯರನ್ನು ಹಾಗೂ ಗಡಿಯಲ್ಲಿ ನಮ್ಮನ್ನು ಕಾಯುತ್ತಿರುವ ವೀರ ಯೋಧರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಡಾ. ಬಿ.ವೈ. ಯುವರಾಜ್
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಅತ್ಯಲ್ಪ ಅವಧಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಕರ್ನಾಟಕದ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಎರಡನೇ ಅತಿ ಹೆಚ್ಚು ಅಂಕ ಗಳಿಸಿದ್ದು, ರಾಜ್ಯ ಮಟ್ಟದಲ್ಲಿ ಕಾಲೇಜು 7ನೇ ಸ್ಥಾನ ಪಡೆದಿದೆ. ಮುಂಬರುವ ವರ್ಷಗಳಲ್ಲಿ ಎಂಡಿ (MD) ಮತ್ತು ಎಂಎಸ್ (MS) ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ. ಅಲ್ಲದೆ, ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ನರ್ಸಿಂಗ್ ಹಾಗೂ ಫಿಸಿಯೋಥೆರಪಿ ಕೋರ್ಸ್ಗಳ ವಿಸ್ತರಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ಡಾ. ಬಿ.ವೈ. ಯುವರಾಜ್ ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರವೀಂದ್ರ ಎಸ್.ಪಿ. ಮಾತನಾಡಿ, ಆಸ್ಪತ್ರೆಯ ಸಿಬ್ಬಂದಿಗಳು ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ಪೂರ್ಣವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಆರ್.ಎಂ.ಓ ಡಾ. ಆನಂದ್ ಪ್ರಕಾಶ್, ಸಹಾಯಕ ಆಡಳಿತಾಧಿಕಾರಿ ಶಿವುಗಾನಾಯ್ಕ್, ಪ್ರಾಂಶುಪಾಲರಾದ ರಾಜಯ್ಯ ಹಾಗೂ ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶುಶ್ರೂಷಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳ ಗಾಯನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸೆಳೆದವು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading