ಬೆಂಗಳೂರು:
ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾ ರಂಗವನ್ನು ಬಲಪಡಿಸುವುದು ಹಾಗೂ ಪತ್ರಕರ್ತರಲ್ಲಿ ಒಗ್ಗಟ್ಟು, ವೃತ್ತಿಪರತೆ ಮತ್ತು ಪತ್ರಿಕಾ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ನಗರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಅಧಿಕೃತ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ಶಿಫಾರಸಿನ ಮೇರೆಗೆ ಹಾಗೂ 2026ರ ಜನವರಿ 20ರಂದು ನಡೆದ ರಾಜ್ಯ ಮಟ್ಟದ ಕಾರ್ಯಕಾರಿ ಮಂಡಳಿ ಸಭೆಯ ಅನುಮೋದನೆಯೊಂದಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ.
ನೂತನ ಪದಾಧಿಕಾರಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಶಿವಶಕ್ತಿ ಪತ್ರಿಕೆಯ ಆರ್. ಶಿವಕುಮಾರ್ ಅವರನ್ನು ಕಾರ್ಯಾಧ್ಯಕ್ಷರಾಗಿ, ಮಲ್ಲೇಶ್ ಗೌಡ ಅವರನ್ನು ಖಜಾಂಚಿಯಾಗಿ ನೇಮಕ ಮಾಡಲಾಗಿದೆ. ಜಿಲ್ಲಾ ಸಮಿತಿ ಸದಸ್ಯರಾಗಿ ಚೇತನ ಹಾಗೂ ಮಹೇಶ್ ಅವರನ್ನು ನೇಮಕ ಮಾಡಲಾಗಿದೆ.
ನೇಮಕಾತಿ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಪೊಲೀಸ್ ವಾರ್ತೆ ಪತ್ರಿಕೆಯ ಸಂಪಾದಕ ಸುಭಾಷ್ ಆರ್. ಶೆಟ್ಟಿ, ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ರಾಜ್ಯ ಸಮಿತಿಯ ಪರವಾಗಿ ರಾಜ್ಯಾಧ್ಯಕ್ಷ ಎಸ್. ರಾಮಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ಅವರು ನೂತನ ತಂಡಕ್ಕೆ ಅಧಿಕೃತ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು.
ಬೆಂಗಳೂರು ನಗರ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಪತ್ರಕರ್ತರು ವೃತ್ತಿಜೀವನದಲ್ಲಿ ಎದುರಿಸುವ ಸಮಸ್ಯೆ ಹಾಗೂ ಸಂಕಷ್ಟಗಳಿಗೆ ಅಗತ್ಯ ನೆರವು ನೀಡುವುದು ನೂತನ ತಂಡದ ಪ್ರಮುಖ ಜವಾಬ್ದಾರಿಗಳಾಗಿವೆ. ಜೊತೆಗೆ ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳಿಗೆ ಸ್ಪಂದಿಸುವುದು, ಬಡವರು ಹಾಗೂ ದುರ್ಬಲ ವರ್ಗದವರ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶವನ್ನು ಸಂಘಟನೆ ಹೊಂದಿದೆ.
ಸತ್ಯ, ನ್ಯಾಯ, ನೈತಿಕತೆ ಹಾಗೂ ಪತ್ರಿಕಾ ಧರ್ಮದ ತತ್ವಗಳನ್ನು ಪಾಲಿಸುವ ಮೂಲಕ ಮೌಲ್ಯಾಧಾರಿತ ಪತ್ರಿಕೋದ್ಯಮಕ್ಕೆ ಒತ್ತು ನೀಡಿ ಸ್ವಚ್ಛ ಹಾಗೂ ಸಮಾನ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದಾಗಿ ನೂತನ ತಂಡ ತಿಳಿಸಿದೆ.
ವರದಿ: ಮಹೇಶ್ ಶರ್ಮಾ


About The Author
Discover more from JANADHWANI NEWS
Subscribe to get the latest posts sent to your email.