ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ರಾಜ್ಯ ಸರ್ಕಾರವು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಮಾಡಲು ತಮ್ಮ ಮನೆಗಳಿಗೆ ಬರುವ ಗಣತಿದಾರರಿಗೆ ಉಪ್ಪಾರ ಸಮುದಾಯದವರು ಜಾತಿಯ ಕಾಲಂ ನಲ್ಲಿ “ಉಪ್ಪಾರ” ಎಂದು ಬರೆಸಬೇಕೆಂದು ಸಾಲಿಗ್ರಾಮ ಪಟ್ಟಣದ ಉಪ್ಪಾರ ಸಮಾಜದ ಮುಖಂಡರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್.ಎಸ್.ಅಶೋಕ್ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಉಪ್ಪಾರ ಸಮುದಾಯದ ಬಂಧುಗಳು ಸರ್ಕಾರದಿಂದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಹಾಗೂ ಉದ್ಯೋಗ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಸರ್ಕಾರದ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ರಾಜ್ಯದೆಲ್ಲೆಡೆ ನಡೆಯುತ್ತಿರುವ ಸಮೀಕ್ಷೆಯಲ್ಲಿ ಸರ್ವರೂ ಪಾಲ್ಗೊಂಡು ತಮ್ಮ ಹಾಗೂ ತಮ್ಮ ಕುಟುಂಬದ ಎಲ್ಲಾ ಸದಸ್ಯರುಗಳ ಮಾಹಿತಿಯನ್ನು ಗಣತಿದಾರರಿಗೆ ನೀಡಬೇಕು.
ಪ್ರಮುಖವಾಗಿ ಈ ಸಂದರ್ಭದಲ್ಲಿ ಜಾತಿ ಹಾಗೂ ಉಪಜಾತಿಯ ಕಾಲಂ ಗಳಲ್ಲಿ “ಉಪ್ಪಾರ” ಎಂದು ಬರೆಸಬೇಕು ಎಂದು ಮನವಿ ಮಾಡಿರುವ ಅವರು ಸಮಸ್ತ ಉಪ್ಪಾರ ಬಂಧುಗಳು ಈ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವ ಮೂಲಕ ರಾಜ್ಯದಲ್ಲಿ ಉಪ್ಪಾರ ಸಮುದಾಯದ ಜನಸಂಖ್ಯೆಯು ಎಷ್ಟಿದೆ ಎಂಬುದನ್ನು ತಿಳಿಯಲು ಅನುಕೂಲವಾಗುತ್ತದೆ ಹಾಗೂ ಸರ್ಕಾರದಿಂದ ಸಮಾಜಕ್ಕೆ ದೊರಕಬೇಕಾದ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದಿದ್ದಾರೆ.
ಈ ಸಮೀಕ್ಷೆಯ ಸಂದರ್ಭದಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿ ಇರುವ ಉಪ್ಪಾರ ಸಮುದಾಯದ ನೌಕರರು, ಯುವಕರು, ಸಂಘಟನೆಗಳವರು, ವಿದ್ಯಾರ್ಥಿಗಳು, ಮಹಿಳೆಯರು, ಜನಪ್ರತಿನಿಧಿಗಳು ಸಮೀಕ್ಷೆ ಕಾರ್ಯ ನಡೆಯುವ ವೇಳೆಯಲ್ಲಿ ಎಲ್ಲರೂ ಭಾಗವಹಿಸಿ ಎಲ್ಲಾ ಮನೆಗಳ ಸಂಪೂರ್ಣ ಹಾಗೂ ಸಮಗ್ರವಾದ ಮಾಹಿತಿಯನ್ನು ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.