March 17, 2026
1743082829910.jpg



ಚಿತ್ರದುರ್ಗ  ಮಾರ್ಚ್27:
ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರ ತಂಡ ಗುರುವಾರ ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ, ನಗರ ಪೊಲೀಸ್ ಠಾಣೆ, ಜಿಲ್ಲಾ ಕಾರಾಗೃಹ ಹಾಗೂ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜಿಲ್ಲಾಸ್ಪತ್ರೆ ಭೇಟಿ:
**ಮೊದಲಿಗೆ ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಹೊರ ರೋಗಿಗಳ ವಿಭಾಗ, ಪುರುಷರ ಜನರಲ್ ವಾರ್ಡ್ ಪರಿಶೀಲನೆ ನಡೆಸಿದ ತಂಡ, ರೋಗಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡಿತು. ವೈದ್ಯರು ಸರಿಯಾದ ಸಮಯಕ್ಕೆ ಬರುತ್ತಾರೆಯೇ? ಎಷ್ಟು ಸಮಯದಿಂದ ವೈದ್ಯರ ಭೇಟಿಗಾಗಿ ಕಾಯುತ್ತಿದ್ದೀರಿ? ಎಂದು ರೋಗಿಗಳನ್ನು ಪ್ರಶ್ನಿಸಿ ಜಿಲ್ಲಾಸ್ಪತ್ರೆಯ ಕಾರ್ಯವೈಖರಿ ಬಗ್ಗೆ ತಿಳಿದುಕೊಂಡಿತು. ಎಷ್ಟು ಜನ ತಜ್ಞ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ? ಇಂಟರ್ನ್‍ಶಿಫ್ ಮಾಡುತ್ತಿರುವ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು? ಸ್ಟಾಫ್ ನರ್ಸ್ ಸಂಖ್ಯೆ, ಜಿಲ್ಲಾಸ್ಪತ್ರೆಯಲ್ಲಿ ಕೈಗೊಳ್ಳುತ್ತಿರುವ ಶಸ್ತ್ರಚಿಕಿತ್ಸೆಗಳ ವಿವರಗಳನ್ನು ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಅವರಿಂದ ಪಡೆದುಕೊಂಡರು. ಔಷಧಿ ವಿತರಣಾ ಮಳಿಗೆಗೆ ಭೇಟಿ ನೀಡಿ, ಅವಧಿ ಮೀರಿದ ಔಷಧಿಗಳೇನಾದರೂ ಇವೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದರು. ಆದರೆ ಅವಧಿ ಮೀರಿದ ಯಾವುದೇ ಔಷಧಿಗಳು ಅಲ್ಲಿ ಕಂಡುಬರಲಿಲ್ಲ.
ನಂತರ ಶಸ್ತ್ರಚಿಕಿತ್ಸೆ ವಾರ್ಡ್‍ಗಳಿಗೆ ಭೇಟಿ ನೀಡಿ, ಶಸ್ತ್ರಚಿಕಿತ್ಸೆ ಪಡೆದ ರೋಗಿಗಳನ್ನು ವಿಚಾರಿಸಿ, ಸೂಕ್ತ ಚಿಕಿತ್ಸೆ ಹಾಗೂ ಆರೈಕೆ ಲಭಿಸುತ್ತಿರುವ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಇದ್ದರು.
ವಿದ್ಯಾರ್ಥಿ ನಿಲಯ ಪರಿಶೀಲನೆ:
*** ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ, ಅಡುಗೆ ಕೋಣೆ ಪರಿಶೀಲನೆ ನಡೆಸಿ, ಮೆನು ಚಾರ್ಟ್ ಪ್ರಕಾರ ವಿದ್ಯಾರ್ಥಿಗಳಿಗೆ ಊಟ ಪೂರೈಕೆ ಮಾಡಬೇಕು. ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ತಿಳಿಸಿದ ಅವರು, ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿ ವಿವರ ಹಾಗೂ ದಾಸ್ತಾನು ರಿಜಿಸ್ಟರ್ ಪರಿಶೀಲನೆ ನಡೆಸಿದರು. ನಂತರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಕಾಲೇಜು ಬಾಲಕಿಯರ ಎಸ್.ಸಿ, ಎಸ್.ಟಿ ವಿದ್ಯಾರ್ಥಿ ನಿಲಯ ಹಾಗೂ ವೃತ್ತಿಪರ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ಹಾಸ್ಟೆಲ್‍ನಲ್ಲಿ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ನೇರವಾಗಿ ಅಡುಗೆ ಕೋಣೆ ಭೇಟಿ ನೀಡಿ, ಅಡುಗೆ ಪದಾರ್ಥಗಳ ಗುಣಮಟ್ಟ ಹಾಗೂ ಅನ್ನ ಸಂಬಾರು ರುಚಿ ನೋಡಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ಮತ್ತಿತರರು ಇದ್ದರು.
ಜಿಲ್ಲಾ ಕಾರಾಗೃಹ:
* ನಗರದ ಹಳೇ ಬೆಂಗಳೂರು ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ, ವ್ಯವಸ್ಥೆಯ ಪರಿಶೀಲನೆ ನಡೆಸಿದರು. ಜೈಲಿನಲ್ಲಿರುವ ವಿಚಾರಾಣಾಧೀನ ಕೈದಿಗಳ ಮೂಲಭೂತ ಹಕ್ಕುಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಕಾರಾಗೃಹದಲ್ಲಿನ ಊಟ ತಯಾರಿಕಾ ಸ್ಥಳ, ಅಡುಗೆ ಕೋಣೆ ಸೇರಿದಂತೆ ಹಲವೆಡೆ ಭೇಟಿ ನೀಡಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ನಂತರ ವಿವಿಧ ಪ್ರಕರಣಗಳಲ್ಲಿ ಜೈಲುವಾಸಿಗಳಾಗಿರುವ ಕೈದಿಗಳನ್ನು ಭೇಟಿಯಾಗಿ ಕಾನೂನು ನೆರವು ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ದರಾಮ ಪಾಟೀಲ್ ಅವರು ಉಪಸ್ಥಿತರಿದ್ದು, ಆಯೋಗದ ಅಧ್ಯಕ್ಷರಿಗೆ ಕಾರಾಗೃಹದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ:
* ಚಿತ್ರದುರ್ಗ ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‍ಆರ್‍ಟಿಸಿ) ಬಸ್ ನಿಲ್ದಾಣಕ್ಕೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದಲ್ಲಿನ ಅಂಗಡಿಗಳಲ್ಲಿ ಅವಧಿ ಮೀರಿದ ದಿನಾಂಕವಿರುವ ತಂಪು ಪಾನೀಯಗಳನ್ನು ಮಾರಾಟ ಮಾಡುತ್ತಿರುವುದನ್ನು ಗುರುತಿಸಿದ ಆಯೋಗದ ಅಧ್ಯಕ್ಷರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತಂತೆ ಸಮಗ್ರವಾಗಿ ಪರಿಶೀಲಿಸಿ, ಅಂತಹ ಅಂಗಡಿ ಮಾಲೀಕರು ಹಾಗೂ ಕಾಲಕಾಲಕ್ಕೆ ಸಮರ್ಪಕವಾಗಿ ಪರಿಶೀಲಿಸದ ಸಾರಿಗೆ ನಿಗಮದ ಅಧಿಕಾರಿಗಳ ಬಗ್ಗೆ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.
ಬಸ್ ನಿಲ್ದಾಣದಲ್ಲಿನ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರೊಂದಿಗೆ ಮಾತನಾಡಿ, ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಇದೆಯಾ? ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆಯೇ ಎಂದು ಪ್ರಶ್ನಿಸಿದರು. ನಂತರ ಬಸ್ ನಿಲ್ದಾಣದ ಶೌಚಾಲಯವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು ಎಂದು ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತದನಂತರ ಕೆಎಸ್‍ಆರ್‍ಟಿಸಿ ಕ್ಯಾಂಟಿನ್‍ಗೆ ಭೇಟಿ ನೀಡಿ, ಕುಡಿಯುವ ನೀರು, ಆಹಾರ ಪರಿಶೀಲನೆ ನಡೆಸಿದರು. ಯಾವುದೇ ಕಾರಣಕ್ಕೂ ಒಮ್ಮೆ ಕರೆದ ಅಡುಗೆ ಎಣ್ಣೆಯನ್ನು ಮತ್ತೆ ಬಳಕೆ ಮಾಡಬಾರದು ಎಂದು ಕ್ಯಾಂಟಿನ್ ಸಿಬ್ಬಂದಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಹೆಬೂಬ್ ಜೀಲಾನಿ ಖುರೇಷಿ, ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ್ ಸೇರಿದಂತೆ ಮತ್ತಿತರರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading