March 16, 2026
IMG-20251227-WA0154.jpg

ಚಳ್ಳಕೆರೆ :
ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಳವಡಿಸಿಕೊಳ್ಳದೆ ಕೇವಲ ರಾಜ್ಯದ ದ್ವಿಭಾಷಾ ನೀತಿಗೆ ಸೀಮಿತವಾಗಿರುವುದು ವಿದ್ಯಾವಂತ ಮಕ್ಕಳ ಭವಿಷ್ಯಕ್ಕೆ ಕಡಿವಾಣ ಹಾಕಿದಂತೆ ಆಗಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಎಂ. ಕಾರಜೋಳ ಅವರು ಹೇಳಿದರು.
ನಗರದ ಹೊಂಗಿರಣ ಇಂಟರ್‌ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025–26ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಶ್ರೀಮಂತ ಮಕ್ಕಳಿಗೆ ಒಂದು ರೀತಿಯ ಶಿಕ್ಷಣ ಮತ್ತು ಬಡ ಮಕ್ಕಳಿಗೆ ಮತ್ತೊಂದು ರೀತಿಯ ಶಿಕ್ಷಣ ವ್ಯವಸ್ಥೆ ಇರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಅಸಮಾನತೆಯನ್ನು ನಿವಾರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದಾರೆ. ಈ ನೀತಿಯ ಮೂಲಕ ತ್ರಿಭಾಷಾ ಶಿಕ್ಷಣ ವ್ಯವಸ್ಥೆ ಸಾಧ್ಯವಾಗುತ್ತದೆ. ಆದರೆ ರಾಜ್ಯ ಸರ್ಕಾರ ಕೇವಲ ದ್ವಿಭಾಷಾ ಶಿಕ್ಷಣಕ್ಕೆ ಸೀಮಿತವಾಗಿರುವುದು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡ ತಕ್ಷಣವೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಬೇಕು ಎಂದು ಈ ವೇದಿಕೆಯಿಂದ ಒತ್ತಾಯಿಸುತ್ತೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಹೆಚ್.ಎಸ್. ರಾಜೇಶ್ ಗುಪ್ತ, ಇಂದಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಗಟ್ಟಿಯಾದ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ರುದ್ರಯ್ಯ ಹಿರೇಮಠ, ಜಿ.ಆರ್. ಜಯಸಿಂಹ, ಶಾಲೆಯ ಅಧ್ಯಕ್ಷ ಡಿ. ನಾಗಪ್ಪ, ಕಾರ್ಯದರ್ಶಿ ದಯಾನಂದ ಪ್ರಹ್ಲಾದ್, ಜಂಟಿ ಕಾರ್ಯದರ್ಶಿ ತಿಪ್ಪೇಸ್ವಾಮಿ, ನಿರ್ದೇಶಕರಾದ ಶಿವಪ್ರಸಾದ್, ಮಧುಸೂದನ್, ಕಲ್ಪನಾ ರಾಜೇಶ್, ಪೋಷಕರಾದ ರಾಮಕೃಷ್ಣ, ತಿಪ್ಪೇಸ್ವಾಮಿ, ರಮೇಶ್, ನಾಗರಾಜ್, ಸುಧನ್ವ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ತಾಲೂಕು ಅಧ್ಯಕ್ಷ ಸುರೇಶ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ರಾಮದಾಸ್, ಬಿಜೆಪಿ ಮುಖಂಡ ಜಯ ಪಾಲಯ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಓಬಳೇಶ್ ಸೇರಿದಂತೆ ಹಲವಾರು ಮುಖಂಡರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading