ಚಳ್ಳಕೆರೆ, ಜು. 28: ಮನಸ್ಸಿಗೆ ಮುದ ನೀಡುವ ಸಂಗೀತವು ಬದುಕಿಗೆ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತದೆ ಎಂದು ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಹೇಳಿದರು.
ನಗರದ ಎಂ. ಗಿರಿಯಮ್ಮ ಸ್ವತಂತ್ರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಚೈತನ್ಯ ಸಾಂಸ್ಕೃತಿಕ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಕವಿ ಮಾನ್ಯರ ಪದಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮೂಲಕ ಸಮಾಜವನ್ನು ಅರ್ಥೈಸಿಕೊಳ್ಳಬೇಕು. ಶಿಕ್ಷಣವು ಕೇವಲ ಅಂಕಗಳಿಕೆ ಹಾಗೂ ಉದ್ಯೋಗಕ್ಕೆ ಸೀಮಿತವಾಗದೆ, ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಸಾಧನವಾಗಬೇಕು ಎಂದು ಹೇಳಿದರು. ಕನ್ನಡ ಭಾಷೆಯ ಮೌಲ್ಯವನ್ನು ಹೆಚ್ಚಿಸಿದ ಕವಿ, ಕಲಾವಿದರನ್ನು ಗೌರವಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಜನಪದ ಗೀತೆ, ಭಕ್ತಿಗೀತೆ ಹಾಗೂ ಭಾವಗೀತೆಗಳ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸಿಕೊಂಡರೆ ನಾಡಿನ ಭೌಗೋಳಿಕತೆ, ಜನಜೀವನ ಮತ್ತು ಸಂಸ್ಕೃತಿಯ ಅರಿವು ಮೂಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಟಿ. ಮಂಜನಾಯ್ಕ್ ಮಾತನಾಡಿ, ಸಂಗೀತವು ಪ್ರಾಚೀನ ಕಾಲದಿಂದಲೂ ಮಾನವ ಜೀವನದ ಅವಿಭಾಜ್ಯ ಅಂಗವಾಗಿದೆ. ಹಬ್ಬ–ಹರಿದಿನಗಳ ಆಚರಣೆಯ ಮೂಲಕ ಗ್ರೀಕರು ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸಿದ್ದು, ಕಲೆ, ಸಂಗೀತ ಮತ್ತು ಸಾಹಿತ್ಯ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಭಾವಗೀತೆ ಹಾಗೂ ಭಕ್ತಿಗೀತೆಗಳ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಜ್ಞಾನ ಸಂಪಾದನೆಯೊಂದಿಗೆ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಚೈತನ್ಯ ಸಾಂಸ್ಕೃತಿಕ ಸಂಸ್ಥೆಯ ಕಲಾವಿದ ಪೂಜಾರಿ ಹನುಮಂತಪ್ಪ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಒ. ರಾಜಣ್ಣ, ಸಾಣೇಹಳ್ಳಿ ಮಠದ ಕಲಾ ಬಳಗದ ಎಚ್. ಪುನತ್ ಪೂಜಾರ್, ಪಿ. ಚಿತ್ರಯ್ಯ, ಮದಕರಿಪುರ ಶ್ರೀನಿವಾಸ್, ಸೃಷ್ಟಿ ತಿಪ್ಪೇಸ್ವಾಮಿ, ಪವಿತ್ರಾ ಅಭಿಷೇಕ್ ಹಾಗೂ ಉಪನ್ಯಾಸಕರಾದ ಟಿ. ಪುಷ್ಪಲತಾ, ಟಿ. ಶೈಲಜಾ, ಟಿ. ತ್ರಿವೇಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About The Author
Discover more from JANADHWANI NEWS
Subscribe to get the latest posts sent to your email.