ಬೆಂಗಳೂರು
ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ವರ್ಗಾವಣೆ ಸ್ಥಳ ನಿರೀಕ್ಷಣೆಯಲ್ಲಿದ್ದ ಮಹಿಳಾ ಅಧಿಕಾರಿ ಇಂಜಿನಿಯರ್ ರನ್ನು ಬೆದರಿಸಿ 80 ಸಾವಿರ ರೂ ಸುಲಿಗೆ ಮಾಡಿದ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ। ನಾಗರಾಜ್ ಎಂಬುವವರು ನೀಡಿದ ದೂರಿನ ಮೇರೆಗೆ ರಘುನಂದನ್ ಎಂಬ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಚಳ್ಳಕೆರೆ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎನ್.ಕಾವ್ಯಾ ಸ್ಥಳ ನಿರೀಕ್ಷಣೆಯಲ್ಲಿದ್ದರು. ರಘುನಂದನ್ ಎಂಬ ವ್ಯಕ್ತಿಯು ಕಾವ್ಯಾ ಅವರಿಗೆ ಕರೆ ಮಾಡಿ ತಾನು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ ಹಾಗೂ ವಿಶೇಷಾಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ನಿಮ್ಮ ವರ್ಗಾವಣೆಗಾಗಿ 2 ಲಕ್ಷ ರೂ ನೀಡಬೇಕು ಎಂದು ಬೇಡಿಕೆ ಇರಿಸಿ ಬೆದರಿಸಿದ್ದಾನೆ. ಅ.15 ಮತ್ತು 16ರಂದು ಕಾವ್ಯಾ ಅವರಿಂದ ಒಟ್ಟು 80 ರೂ ಸಾವಿಗಳನ್ನು ಫೋನ್ ಪೇ ಮುಖಾಂತರ ವರ್ಗಾಯಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಅತೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
About The Author
Discover more from JANADHWANI NEWS
Subscribe to get the latest posts sent to your email.