ಚಿತ್ರದುರ್ಗಜ.30:
“ಒಟ್ಟಾಗಿ ನಾವು ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಭಾದಿತರಾದ ಎಲ್ಲರನ್ನು ಹಿಂದುಳಿಯದಂತೆ ನೋಡಿಕೊಳ್ಳೋಣ” ಎಂಬ ಘೋಷಣೆಯೊಂದಿಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಜಾಥಾ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು.
ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಸಿ.ಒ.ಸುಧಾ, ಡಾ.ಜಿ.ಓ.ನಾಗರಾಜ್, ಡಾ.ಕಾಶೀ ಅವರು ಸ್ಪರ್ಶ್ ಕುಷ್ಠರೋಗ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಿ.ಓ.ನಾಗರಾಜ್ ಮಾತನಾಡಿ, ಆರೋಗ್ಯ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಇದೇ ಜ.30 ರಿಂದ ಫೆ.13 ರವರೆಗೆ ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನ ಹಮ್ಮಿಕೊಳ್ಳಲಾಗುವುದು. ಕುಷ್ಠ ರೋಗವನ್ನು ಪ್ರಾಥಮಿಕ ಹಂತದಲ್ಲಿ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದು ಆಂದೋಲನದ ಉದ್ದೇಶವಾಗಿದೆ ಎಂದರು.
ಶಿಕ್ಷಣ ಇಲಾಖೆ ಹಾಗೂ ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಲ್ಲಿ ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡು ಬಂದಲ್ಲಿ, ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ನೀಡಿ ಆಶಾ ಕಾರ್ಯಕರ್ತೆಯರು ಮನೆ- ಮನೆ ಭೇಟಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಹಾಗೂ ಕುಷ್ಠ ರೋಗಕ್ಕೆ ಸರಿಯಾದ ಚಿಕಿತ್ಸೆ ಪಡೆದಲ್ಲಿ ಪೂರ್ಣವಾಗಿ ಗುಣಮುಖರಾಗಬಹುದು. ಈ ಬಗ್ಗೆ ಜ.30ರಂದು ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರನ್ನೊಳಗೊಂಡಂತೆ ಅರಿವು ಕಾರ್ಯಕ್ರಮ ಆಯೋಜಿಸಿ, ಜನವರಿ 30 ರಿಂದ ಫೆಬ್ರವರಿ 13 ರವರೆಗೆ ಒಟ್ಟು 15 ದಿನಗಳ ಕಾಲ ಜಿಲ್ಲೆಯಲ್ಲಿರುವ ಪ್ರತಿ ಮನೆ -ಮನೆಗೂ ಭೇಟಿ ನೀಡಿ ಕುಷ್ಠರೋಗ ಸಮೀಕ್ಷೆ ನಡೆಸಿ, ಇದರೊಂದಿಗೆ ಶಾಲಾ, ಕಾಲೇಜು ಹಂತದಲ್ಲಿ ಕುಷ್ಠ ರೋಗದ ಕುರಿತು ಜಾಗೃತಿ ನಡೆಸಲಾಗುತ್ತದೆ ಎಂದು ಹೇಳಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ ಜಾನಕಿ ಅವರು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು.
ಜಾಥಾ ಕಾರ್ಯಕ್ರಮವು ಜಿಲ್ಲಾ ಆಸ್ಪತ್ರೆ ಆವರಣದಿಂದ ಪ್ರಾರಂಭವಾಗಿ ಅಂಬೇಡ್ಕರ್ ವೃತ್ತದ ಮೂಲಕ ಎಸ್ಜೆಎಂ ಡೆಂಟಲ್ ಕಾಲೇಜ್ ಮುಂಭಾಗದಿಂದ ಸಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಸಿ.ಓ ಸುಧಾ, ಡಾ.ಎನ್ ಕಾಶಿ, ಭಾರತೀಯ ವಿಜ್ಞಾನ ಸಂಸ್ಥೆಯ ಮುಖ್ಯಸ್ಥ ಡಾ.ಮಹುವ ಮತ್ತು ತಂಡ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್, ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವೈ.ಟಿ.ತಿಪ್ಪೇಸ್ವಾಮಿ, ಚಂದ್ರಣ್ಣ, ಕಿರಣ್, ಮಂಜುನಾಥ್, ರಾಜೇಂದ್ರ ಪ್ರಸಾದ್, ಸಹಾಯಕ ಸಾಂಖ್ಯಿಕ ಅಧಿಕಾರಿ ಮಂಜುನಾಥ್, ಆಶಾ ಕಾರ್ಯಕರ್ತೆಯರು, ನಸಿರ್ಂಗ್ ಕಾಲೇಜ್ ವಿದ್ಯಾರ್ಥಿನಿಯರು, ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.


About The Author
Discover more from JANADHWANI NEWS
Subscribe to get the latest posts sent to your email.